ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲ ಝಳಕ್ಕೆ ಕಾಯ್ದು ಕಾವಲಿಯಂತಿದ್ದ ಇಳೆಗೆ ಮಳೆ ತಂಪೆರೆದಿದೆ.
ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಆದರೆ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಕಂಡು ಬಂದಿತ್ತು. ನಂತರ ಸಂಜೆ ವೇಳಗೆ ದಿಢೀರನೆ ಜೋರು ಮಳೆ ಶುರುವಾಯಿತು. ಗುಡುಗು ಸಮೇತ ಭಾರೀ ಮಳೆ ಸುರಿದಿದೆ. ನಾಪೋಕ್ಲು, ಭ್ರಹ್ಮಗಿರಿ, ಭಾಗಮಂಡಲ, ತಲಕಾವೇರಿ ಹಾಗೂ ಮಡಿಕೇರಿ ವ್ಯಾಪ್ತಿಯಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಜೋರು ಮಳೆ ಸುರಿಯಿತು. ವರ್ಷದ ಮೊದಲ ಹಬ್ಬ ಯುಗಾದಿಗೂ ಪ್ರಾರಂಭದಲ್ಲಿ ವರುಣ ಮುಂದಡಿ ಇಟ್ಟಿರುವುದು ಜಿಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಂತೆ ಆಗಿದೆ. ಅಕಾಲಿಕ ಮಳೆ ಅಬ್ಬರಕ್ಕೆ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಬಂದಿದೆ. ಸುರಿದ ಭಾರಿ ಮಳೆಗೆ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಐದು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಈ ಜಿಲ್ಲೆಯಲ್ಲೂ ಕೂಡ ಅರ್ಧ ಗಂಟೆಗೂ ಅಧಿಕಕಾಲ ಮಳೆಯಾಗಿದೆ. ಚಿಕ್ಕಮಗಳೂರಿನ ಕಳಸ, ಬಾಳೆಹೊನ್ನೂರು, ಕೊಪ್ಪ, ಜಯಪುರ ಸೇರಿದಂತೆ ಹಲವೆಡೆ ಗುಡುಗು ಸಹಿತ ವರುಣ ದೇವ ಅರ್ಭಟಿಸಿದ್ದಾನೆ. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಹಲವೆಡೆ ಮೋಡಕವಿದ ವಾತವರಣವಿದೆ.
ಇಂದು ಗದಗ ಜಿಲ್ಲೆಯ ಹಲವಡೆ ಮಳೆಯಾಗಿದ್ದು, ಗುಡುಗು, ಸಿಡಿಲು, ಗಾಳಿ ಸಹಿತ ಮಳೆ ಬಂದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಹಲವು ಕಡೆ ಧಾರಾಕಾರ ಮಳೆ ಸುರಿದ್ದು, ಬಿಸಿಲಿನಿಂದ ಬೆಂದ ಜನರಿಗೆ ತಂಪೆರೆದಿದ್ದಾನೆ. ಸಂಜೆ ಶಿವಮೊಗ್ಗದಲ್ಲೂ ಕೂಡ ಗುಡುಗು ಮಿಂಚು ಸಹಿತ ಮಳೆಯಾಗಿದೆ. 20 ನಿಮಿಷಕ್ಕೂ ಅಧಿಕ ಕಾಲ ಮಳೆ ಸುರಿದಿದೆ.