ಮಡಿಕೇರಿ: ವಿಶ್ವದೆಲ್ಲೆಡೆ ಭಯ ಹುಟ್ಟಿಸಿರುವ ಕೊರೊನಾ ವೈರಸ್ ರಾಜ್ಯದ ಪ್ರವಾಸೋದ್ಯಮದ ಮೇಲೂ ದುಷ್ಪರಿಣಾಮ ಬೀರಿದೆ. ಅದರಲ್ಲೂ ಪ್ರವಾಸೋದ್ಯಮವನ್ನೇ ನಂಬಿರುವ ಕೊಡಗಿನ ವ್ಯಾಪಾರೋದ್ಯಮಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕರ್ನಾಟಕದಲ್ಲೂ ಕೊರೊನಾ ವೈರಸ್ ಹರಡಿರುವ ಪ್ರಕರಣಗಳು ಹೊರಬರುತ್ತಿದ್ದಂತೆ ಕೊಡಗಿನ ಪ್ರವಾಸೋದ್ಯಮ ಸಂಪೂರ್ಣ ನೆಲಕಚ್ಚಿದೆ. ಜಿಲ್ಲೆಯಲ್ಲಿ ಇರುವ 4 ಸಾವಿರಕ್ಕೂ ಹೆಚ್ಚು ಹೋಂ ಸ್ಟೇ ಮತ್ತು ರೆಸಾರ್ಟ್ಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ವೈರಸ್ ರೋಗ ಹರಡುವುದಕ್ಕೂ ಮುನ್ನವೇ ಪ್ರವಾಸಿಗರು ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಬುಕ್ಕಿಂಗ್ ಮಾಡಿಕೊಂಡಿದ್ದನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಪರಿಣಾಮ ಇದನ್ನೇ ನಂಬಿಕೊಂಡಿದ್ದ ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರು ಸಿಬ್ಬಂದಿಗೆ ಸಂಬಳ ನೀಡುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ.
ಮತ್ತೊಂದೆಡೆ ಜಿಲ್ಲಾಧಿಕಾರಿ ಕೂಡ ಹೋಂ ಸ್ಟೇ, ರೆಸಾರ್ಟ್ ಮತ್ತು ಪ್ರವಾಸಿ ತಾಣಗಳ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೊರ ದೇಶಗಳಿಂದ ಯಾರಾದರೂ ಪ್ರವಾಸಿಗರು ಬಂದರೆ ಅವರ ಬಗ್ಗೆಯೂ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಇದೆಲ್ಲವೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರಿದೆ.