ಬೆಳಗಾವಿ: ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೆ ಒಳಪಡಿಸಬೇಡಿ ಎಂದು ಬೈಲಹೊಂಗಲದ ಮಡಿವಾಳೇಶ್ವರ ಮಠದ ಸ್ವಾಮೀಜಿ ಡೆತ್ ನೋಟ್ನಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬಳಿಕ ಮಹಿಳೆಯರಿಬ್ಬರು ಮಾತನಾಡಿದ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋದಲ್ಲಿ ಹಲವು ಪ್ರತಿಷ್ಠಿತ ಸ್ವಾಮೀಜಿಗಳ ವಿರುದ್ಧ ಮಹಿಳೆಯರು ಮಾತನಾಡಿದ್ದರು. ಈ ಆಡಿಯೋದಲ್ಲಿ ನೇಗಿನಹಾಳ ಮಠದ ಶ್ರೀಗಳ ಹೆಸರು ಉಲ್ಲೇಖಿಸಲಾಗಿತ್ತು. ಇದಾದ ಬೆನ್ನಲ್ಲೇ ನೇಗಿನಹಾಳ ಮಡಿವಾಳೇಶ್ವರ ಮಠದ ಬಸವ ಸಿದ್ಧಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿರುವ ಸ್ವಾಮೀಜಿ, ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೆ ಒಳಪಡಿಸಬೇಡಿ. ಈ ಲೋಕದ ಗೊಡವೆ ಸಾಕು, ಹಡೆದ ತಾಯಿ ನನ್ನ ಕ್ಷಮಿಸು, ಮಠದ ಭಕ್ತರು ನನ್ನನ್ನು ಕ್ಷಮಿಸಿ. ನನ್ನ ನಡೆ ಮಡಿವಾಳೇಶ್ವರ ಕಡೆಗೆ. ಮಠದ ಕಮಿಟಿ, ಭಕ್ತರು ಮಠವನ್ನು ಮುನ್ನಡೆಸಿಕೊಂಡು ಹೋಗಿ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು
ಇತ್ತ ಸ್ವಾಮೀಜಿಗಳು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ವೈರಲ್ ಆದ ಆಡಿಯೋದಲ್ಲಿ ಮಾತನಾಡಿರುವ ಮಹಿಳೆಯರ ಬಂಧನ ಆಗಬೇಕು ಎಂದು ಮಠದ ಭಕ್ತರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಡಾ.ಸಂಜೀವ ಪಾಟೀಲ್, ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದರು. ಘಟನೆ ಬಳಿಕ ಮಾಹಿತಿ ನೀಡಿದ ಎಸ್ಪಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.