ಬೆಳಗಾವಿ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ (Mahakumbh Mela stampede) ಸಿಕ್ಕಿ ಮೃತಪಟ್ಟ ಕನ್ನಡಿಗರ ಮೃತದೇಹಗಳನ್ನು ರಾಜ್ಯಕ್ಕೆ ತರುವ ಪ್ರಕ್ರಿಯೆ ನಡೆದಿದೆ. ಈಗಾಗಲೇ ಮಹಾದೇವಿ, ಅರುಣ್ ಕೋಪರ್ಡೆ ಮೃತದೇಹಗಳನ್ನು ಬೆಳಗಾವಿಗೆ (Belagavi) ತರಲಾಗಿದ್ದು, ಮೃತರ ಬಂಧುಗಳ ಆಕ್ರಂದನ ಮುಗಿಲುಮುಟ್ಟಿದೆ.
ಇನ್ನೂ ಜ್ಯೋತಿ, ಮೇಘ ಮೃತದೇಹಗಳನ್ನು ಹೊತ್ತ ವಿಮಾನ ಪಣಜಿಗೆ ಬಂದಿದೆ. 2 ಮೃತದೇಹಗಳನ್ನು ಮಧ್ಯರಾತ್ರಿ ಹೊತ್ತಿಗೆ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಇನ್ನೆರಡು ದಿನದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಪ್ಲ್ಯಾನ್
ಕಾಲ್ತುಳಿದಲ್ಲಿ ಮೃತಪಟ್ಟ ಬೆಳಗಾವಿಯ ಅರುಣ್ ಕೋಪರ್ಡೆ, ಮಹಾದೇವಿ ಬಾವನೂರ ಮೃತದೇಹಗಳನ್ನು ಇಂದು ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು. ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಜಿಲ್ಲಾಡಳಿತಕ್ಕೆ ಮೃತದೇಹಗಳನ್ನು ಹಸ್ತಾಂತರಿಸಿದ ನಂತರ ಅಂತಿಮ ನಮನ ಸಲ್ಲಿಸಲಾಯಿತು. ಸಂಸದ ಜಗದೀಶ್ ಶೆಟ್ಟರ್, ಶಾಸಕ ಅಭಯ್ ಪಾಟೀಲ್, ಆಸೀಫ್ ಸೇಠ್, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸಹ ಅಂತಿಮ ನಮನ ಸಲ್ಲಿಸಿದರು. ಅನೇಕ ಬಿಜೆಪಿ ಕಾರ್ಯಕರ್ತರು ಪಾರ್ಥೀವ ಶರೀರಕ್ಕೆ ಮಾಲಾರ್ಪಣೆ ಮಾಡಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗಣ್ಯರು ಅಂತಿಮ ನಮನ ಸಲ್ಲಿಸಿದ ಬಳಿಕ ಮೃತದೇಹವನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಸದ್ಯ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಇದನ್ನೂ ಓದಿ: ಮುಡಾ ಹಗರಣದಲ್ಲಿ ಅಕ್ರಮ ಹಣದ ವರ್ಗಾವಣೆಯಾಗಿದೆ – ಇಡಿಯಿಂದ ಸಬ್ ರಿಜಿಸ್ಟ್ರಾರ್ಗಳಿಗೆ 104 ಪುಟಗಳ ಪತ್ರ