ಹಾಸನ: ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕಕ್ಕೆ ಜೈನಕಾಶಿ ಶ್ರವಣಬೆಳಗೊಳ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಪಂಚಕಲ್ಯಾಣ ನಗರದ ಚಾವುಂಡರಾಯ ಸಭಾಮಂಟಪದಲ್ಲಿ ಬೆಳಗ್ಗೆ 10.45ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹೋತ್ಸವಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯ್ ವಾಲಾ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸೇರಿದಂತೆ ಮೊದಲಾದ ಗಣ್ಯರು ಭಾಗಿಯಾಗಲಿದ್ದಾರೆ.
ಇಂದಿನಿಂದ 19 ದಿನಗಳ ಕಾಲ ಮಸ್ತಕಾಭಿಷೇಕ ಸಂಬಂಧಿತ ಕಾರ್ಯಕ್ರಮಗಳು ನಡೆಯಲಿದ್ದು, ಫೆಬ್ರವರಿ 17ರಿಂದ ವಿಂಧ್ಯಗಿರಿ ಮೇಲಿರುವ ವಿರಾಗಿಗೆ ಮಹಾಮಜ್ಜನ ನಡೆಯಲಿದೆ.
ಮಸ್ತಕಾಭಿಷೇಕದ ವೇಳೆ ಹೈಟೆಕ್ ಅಟ್ಟಣಿಗೆ ಮೇಲೆ 5 ಸಾವಿರ ಮಂದಿ ಕೂರುವ ವ್ಯವಸ್ಥೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಒಟ್ಟು 8 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪ್ರಮುಖ ರಸ್ತೆ, ವೇದಿಕೆ ಜಾಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಶ್ರವಣಬೆಳಗೊಳದ ಸುತ್ತಮುತ್ತ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 27ರವರೆಗೆ ಮದ್ಯ ನಿಷೇಧಿಸಲಾಗಿದೆ.