ಮುಂಬೈ: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ(Maharashtra-Karnataka Border Row) ಉಲ್ಬಣಗೊಂಡಿರುವ ನಡುವೆಯೇ ಮುಂದಿನ 24 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕೇಂದ್ರ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರವೇ(Karnataka BJP Government) ನೇರ ಹೊಣೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್(Sharad Pawar) ಹೇಳಿದ್ದಾರೆ.
ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದ ಜನರ ತಾಳ್ಮೆಯನ್ನು ಪರೀಕ್ಷಿಸಬೇಡಿ ಮತ್ತು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಪವಾರ್ ಕರ್ನಾಟಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಈಗ ದೃಢ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಎಲ್ಲಾ ಪಕ್ಷಗಳನ್ನು ವಿಶ್ವಾಸದಲ್ಲಿಟ್ಟುಕೊಳ್ಳಬೇಕು. ಸಂಸತ್ತಿನ ಅಧಿವೇಶನ ಪ್ರಾರಂಭವಾಗಲಿದ್ದು ಎಲ್ಲಾ ಸಂಸದರು ಒಗ್ಗೂಡಿ ಮತ್ತು ಅದೇ ನಿಲುವನ್ನು ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮೇಯುತ್ತಿದ್ದ ಹಸುಗಳನ್ನು ಗುಂಡಿಟ್ಟು ಕೊಂದ ಎಸ್ಟೇಟ್ ಮಾಲೀಕ
ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಉದ್ದೇಶಪೂರ್ವಕವಾಗಿ ಪರಿಸ್ಥಿತಿಯನ್ನು ಉಲ್ಬಣಗೊಳಿಸುತ್ತಿದೆ ಎಂದು ಆರೋಪಿಸಿದ ಪವಾರ್, ಕಳೆದ ಕೆಲವು ವಾರಗಳಿಂದ ಪರಿಸ್ಥಿತಿಯನ್ನು ಬೇರೆ ದಿಕ್ಕಿನಲ್ಲಿ ಕೊಂಡೊಯ್ಯಲು ಕರ್ನಾಟಕದ ಸಿಎಂ ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿದ ನಂತರ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದರು.