ಕೋಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ (SaltLake Stadium) ನಡೆದ ಮೆಸ್ಸಿ (Messi) ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆಗೆ ಮಮತಾ ಬ್ಯಾನರ್ಜಿ (Mamata Banerjee) ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಕಾರ್ಯಕ್ರಮದಲ್ಲಿನ ನಿರ್ವಹಣೆಯಲ್ಲಿನ ತೊಂದರೆಯಿಂದಾಗಿ ಆಘಾತಕ್ಕೊಳಗಾಗಿದ್ದೇನೆ. ಈ ದುರದೃಷ್ಟಕರ ಘಟನೆಗಾಗಿ ಲಿಯೋನೆಲ್ ಮೆಸ್ಸಿ ಮತ್ತು ಎಲ್ಲಾ ಕ್ರೀಡಾ ಪ್ರೇಮಿಗಳು, ಅವರ ಅಭಿಮಾನಿಗಳಿಗೆ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಗೆ ಕಾರಣದ ತನಿಖೆ ಮಾಡಲು ತನಿಖಾ ಸಮಿತಿ ರಚಿಸಲಾಗುವುದು. ಮಾಜಿ ನ್ಯಾಯಾಧೀಶರ ನೇತೃತ್ವದ ಮತ್ತು ಉನ್ನತ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಈ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾದ ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಚೇರ್, ಬಾಟಲ್ ಎಸೆದು ಅಕ್ರೋಶ
ನಿವೃತ್ತ ನ್ಯಾಯಮೂರ್ತಿ ಆಶಿಮ್ ಕುಮಾರ್ ರೇ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಕ್ರಮಗಳನ್ನು ಶಿಫಾರಸುಗಳನ್ನು ಸಮಿತಿ ಸೂಚಿಸಲಿದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೆಸ್ಸಿ G.O.A.T. ಟೂರ್ ಭಾಗವಾಗಿ ಇಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದ ವೀಕ್ಷಣೆಗೆ 5,000 ರೂ. ನಿಂದ ಹಿಡಿದು 25,00 ರೂ. ಟಿಕೆಟ್ ದರ ನಿಗದಿಯಾಗಿತ್ತು. ಟಿಕೆಟ್ ಬೆಲೆ ದುಬಾರಿಯಾಗಿದ್ದರೂ ಮೆಸ್ಸಿ ನೋಡಲೆಂದು ಅಭಿಮಾನಿಗಳು ಸ್ಟೇಡಿಯಂಗೆ ಆಗಮಿಸಿದ್ದರು. ಆದರೆ ಕಾರ್ಯಕ್ರಮ ಕೇವಲ 10 ನಿಮಿಷದಲ್ಲಿ ಕೊನೆಗೊಂಡಿತು. ಇದಕ್ಕೆ ಸಿಟ್ಟಾದ ಅಭಿಮಾನಿಗಳು ಚೇರ್ಗಳನ್ನು ಕಿತ್ತೆಸೆದಿದ್ದಾರೆ. ನೀರಿನ ಬಾಟಲಿಗಳನ್ನು ಮೈದಾನಕ್ಕೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.
ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಈ ಘಟನೆ ನಡೆದಿದ್ದು, ಆಡಳಿತಾರೂಢ ತೃಣಮೂಲ ಪಕ್ಷಕ್ಕೆ ಭಾರಿ ಮುಜುಗರವನ್ನುಂಟುಮಾಡಿದೆ. ಇದನ್ನೂ ಓದಿ: ಭಾರತದ ಮೇಲೆ 50% ಸುಂಕ| ಟ್ರಂಪ್ ನೀತಿ ಕೊನೆಯಾಗಬೇಕು – ಅಮೆರಿಕದ ಸಂಸತ್ತಿನಲ್ಲಿ ನಿರ್ಣಯ ಮಂಡನೆ

