ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ (Bomb Threat Call to Rajbhavan) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಭಾಸ್ಕರ್ ಎಂದು ಗುರುತಿಸಿದ್ದು, ಈತ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ವಡ್ಡಹಳ್ಳಿಯ ನಿವಾಸಿ. ಇತ್ತೀಚೆಗೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದ ಸುದ್ದಿಯನ್ನು ಭಾಸ್ಕರ್ ತಿಳಿದುಕೊಂಡಿದ್ದ. ಈ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದ ಬಗ್ಗೆಯೂ ತಿಳಿದುಕೊಂಡಿದ್ದ. ಇದನ್ನೂ ಓದಿ: ನಿರುದ್ಯೋಗ ಯುವಕ-ಯುವತಿಯರಿಗೆ ಗುಡ್ನ್ಯೂಸ್ – ಡಿ.21ರಿಂದ `ಯುವ ನಿಧಿ’ಗೆ ನೋಂದಣಿ
ಸೋಮವಾರ ಊರಿನಿಂದ ಬೆಂಗಳೂರಿಗೆ ಬಂದಿದ್ದ ಈತ ಬೆಂಗಳೂರು ಪೊಲೀಸರನ್ನು ಮತ್ತೆ ಆಟವಾಡಿಸಬೇಕು ಎಂದು ನಿರ್ಧರಿಸಿದ್ದ. ಇದಕ್ಕಾಗಿ ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದ. ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದ. ಕರೆ ಕಟ್ ಮಾಡಿ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದ.
ಇತ್ತ ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ (NIA) ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂತೆಯೇ ಪೊಲೀಸರು ಬಾಂಬ್ ಬೆದರಿಕೆ ಕರೆ ನಂತರ ಕರೆ ಬಂದ ನೆಟ್ವರ್ಕ್ ಟ್ರ್ಯಾಕ್ ಮಾಡುತ್ತಿದ್ದರು. ಆದರೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದ. ಅಂತೆಯೇ ಚಿತ್ತೂರಿನಿಂದ ತನ್ನೂರಿಗೆ ವಾಪಸ್ ಆಗುವಾಗ ಭಾಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ವಿಧಾನಸೌಧ ಠಾಣೆ ಪೊಲೀಸರು ಭಾಸ್ಕರ್ ನ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.