ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಯುವಕನೊಬ್ಬನ ಶವ ಕಾರಿನಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕು ಗಡಿಗವಾರಹಳ್ಳಿ ಬಳಿ ನಡೆದಿದೆ.
ಮೃತ ಯುವಕನನ್ನು 28 ವರ್ಷದ ನಟರಾಜ್ ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಧರ್ಮವಾರಪಲ್ಲಿ ನಿವಾಸಿ. ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿರುವ ಪ್ರಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ನಟರಾಜ್ ಬೆಂಗಳೂರಿನ ಕೆ.ಆರ್ ಪುರದಲ್ಲಿ ವಾಸವಾಗಿದ್ದು, ಈಗ ಜಿಲ್ಲೆಯ ಗಡಿಗವಾರಪಲ್ಲಿ ಗ್ರಾಮದ ಹೊರವಲಯದ ಪೊದೆ ಬಳಿ ನಿಲ್ಲಿಸಿದ್ದ ಇಂಡಿಕಾ ಕಾರಿನ ಡ್ರೈವಿಂಗ್ ಸೀಟಿನಲ್ಲಿ ಶವವಾಗಿ ಪತ್ತೆಯಾಗಿದೆ.
ಘಟನೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ತಲೆ ಮತ್ತು ಕತ್ತಿನ ಭಾಗದಲ್ಲಿ ಗಂಭೀರವಾದ ಗಾಯಗಳಾಗಿದ್ದು, ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಲಾಗಿದೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಸಂಬಂಧ ಕೆಂಚಾರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.