ಭುವನೇಶ್ವರ: ವ್ಯಕ್ತಿಯೊಬ್ಬ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ಬಳಿಕ ತನ್ನ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಸೋರೋ ಪ್ರದೇಶದಲ್ಲಿ ನಡೆದಿದ್ದು, ಬೇಬಿ ಖಾತುನ್ ಮೃತ ಮಹಿಳೆ. ಆರೋಪಿಯನ್ನು ಶೇಖ್ ಖಾತುನ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿ ಬಾಲಸೋರ್ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಪ್ರಕರಣ?
ಶೇಖ್ ಮತ್ತು ಮೃತ ಬೇಬಿ 8 ತಿಂಗಳ ಹಿಂದೆ ಮದುವೆಯಾಗಿದ್ದರು. ಆಗಾಗ ಈ ದಂಪತಿಯ ಮಧ್ಯೆ ಜಗಳ ನಡೆಯುತ್ತಿದ್ದು, ಅದೇ ರೀತಿ ಶನಿವಾರ ರಾತ್ರಿ ದಂಪತಿಯ ಕ್ಷುಲಕ ಕಾರಣಕ್ಕೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿ ಶೇಖ್ ತನ್ನ ಹೆಂಡತಿ ಬೇಬಿ ಕುತ್ತಿಗೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಪರಿಣಾಮ ಬೇಬಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಆತ ತನ್ನ ಮನೆಯಿಂದ ಕೇವಲ ಒಂದು ಕಿ.ಮೀ ದೂರದಲ್ಲಿ ಒಂದು ಧಾರ್ಮಿಕ ಸ್ಥಳಕ್ಕೆ ಓಡಿಹೋಗಿದ್ದಾನೆ. ಅಲ್ಲಿ ಆತ ತನ್ನ ಕುತ್ತಿಗೆಯನ್ನು ಕೂಯ್ದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಆತನನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಸೋರೋ ಪೊಲೀಸರು ಬಂದು ಆತನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯಕ್ಕೆ ಪೊಲೀಸರು ಬೇಬಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.