ಚಿಕ್ಕಮಗಳೂರು: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ನಂತರ ಆಕೆಯನ್ನ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ.
ಶ್ರೀರಕ್ಷಾ (12) ಮೃತ ದುರ್ದೈವಿ ಬಾಲಕಿ. ಈಕೆ ಸ್ಥಳೀಯ ಶಾಲೆಯೊಂದರಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮುಖ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ವಿವರ: ಬಾಲಕಿ ಶ್ರೀರಕ್ಷಾ ಪ್ರತಿ ದಿನದಂತೆ ಶನಿವಾರ ಮಧ್ಯಾಹ್ನ ಆಟೋ ಇಳಿದು ಕಾಡಿನ ದಾರಿಯಲ್ಲಿ ಮನೆಗೆ ಹಿಂತಿರುಗುತ್ತಿದ್ದಳು. ಈ ವೇಳೆ ಕಾಮುಕ ಬಾಲಕಿಯನ್ನು ಬಲವಂತವಾಗಿ ಪೊದೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಇದನ್ನು ವಿರೋಧಿಸಿದ್ದಕ್ಕೆ ಕೋಪಕೊಂಡ ಆರೋಪಿ ಕಲ್ಲಿನಿಂದ ಜಜ್ಜಿ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಕೊಲೆ ಮಾಡಿದ ಬಳಿಕ ಸುಮುಖ ಮನೆಗೆ ಹೋಗಿ ಸ್ನಾನ ಮಾಡಿ ಮತ್ತೆ ಅದೇ ಸ್ಥಳಕ್ಕೆ ಬಂದಿದ್ದಾನೆ. ಅಷ್ಟರಲ್ಲಿ ಸುತ್ತಮುತ್ತಲಿನ ಜನರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿದ್ದಾರೆ. ಆಗ ಗ್ರಾಮಸ್ಥರು ಸುಮುಖನ ಹೆಸರು ಪ್ರಸ್ತಾಪಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಒಂಟಿಯಾಗಿ ಓಡಾಡುವ ಹುಡುಗಿಯರ ಜೊತೆ ಆತ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದನು ಎಂದು ಆರೋಪಿಸಿದ್ದಾರೆ.
ಹರಿಹರಪುರ ಪೊಲೀಸರು ಈ ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡು ಅನುಮಾನದ ಮೇರೆಗೆ ಸುಮುಖನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದು, ಆಸ್ಪತ್ರೆ ಮುಂಭಾಗ ಹೆಣ್ಣು ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.