ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನಿಗೆ ಯಂತ್ರ ತಗುಲಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಾಲೂಕಿನ ಗೊಲ್ಲರಹೊಸಹಳ್ಳಿ ಗ್ರಾಮದ ಚನ್ನಕೇಶವ (40) ಮೃತ ಕಾರ್ಮಿಕ. ಹಲವು ವರ್ಷಗಳಿಂದ ಕಾರ್ಖಾನೆಯ ಮೆಕ್ಯಾನಿಕಲ್ ವಿಭಾಗದಲ್ಲಿ (ಪಿಟ್ಟರ್) ಕಾರ್ಮಿಕನಾಗಿ ಚನ್ನಕೇಶವ ಕೆಲಸ ಮಾಡಿಕೊಂಡು ಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದರು. ಎಂದಿನಂತೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಯಂತ್ರ ತಗುಲಿ ಈ ಘಟನೆ ಸಂಭವಿಸಿದೆ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟಿರುವ ಕಾರ್ಮಿಕರಿಗೆ ಕಾರ್ಖಾನೆಯ ಆಡಳಿತ ಮಂಡಳಿ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತ ಮುಖಂಡ ಉಮೇಶ್ ನೇತೃತ್ವದಲ್ಲಿ ಕಾರ್ಮಿಕರು ಕಾರ್ಖಾನೆಯ ಆವರಣದಲ್ಲಿ ಪ್ರತಿಭಟನೆ ಮಾಡಿದರು.