ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅಶ್ವಿನ್ಗೌಡ ಸ್ಪರ್ಧಿಸುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಜಿಲ್ಲೆಯ ರಾಜಕೀಯದಲ್ಲಿ ವಿಶೇಷವಾಗಿ ಚರ್ಚೆಯಾಗುತ್ತಿದೆ.
ಇತ್ತೀಚೆಗಷ್ಟೇ ತಮ್ಮ ಐಆರ್ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಉಪಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಲಕ್ಷ್ಮಿ ಅಶ್ವಿನ್ಗೌಡ ಈ ಬಗ್ಗೆ ಪಕ್ಷದ ವರಿಷ್ಠರ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಅಂತ ಹೇಳಿದ್ದಾರೆ.
ಇನ್ನು ಕಳೆದೆರೆಡು ಬಾರಿಯಿಂದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ರಮ್ಯಾ, ಜೆಡಿಎಸ್ನಿಂದ ಪುಟ್ಟರಾಜು ಎದುರಾಳಿಗಳಾಗಿದ್ದರು. ಆದರೆ ಪುಟ್ಟರಾಜು ಶಾಸಕರಾಗಿ ಆಯ್ಕೆಯಾಗಿದ್ದು, ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಉಪಚುನಾವಣೆ ಮುಖಾಂತರವೇ ರಾಜಕೀಯ ಪ್ರವೇಶಿಸಿದ್ದ ರಮ್ಯಾ ಕಳೆದ ಒಂದೂವರೆ ವರ್ಷದಿಂದ ಮಂಡ್ಯ ಕಡೆ ತಲೆ ಹಾಕಿಲ್ಲ.
ಅಷ್ಟೇ ಅಲ್ಲದೇ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ರಮ್ಯಾ ಅವರು ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಧೈರ್ಯ ಮಾಡುತ್ತಾರಾ ಎನ್ನುವ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ.
ಇನ್ನು ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲೂ ಒಮ್ಮತದ ಅಭ್ಯರ್ಥಿ ನಿಲ್ಲಿಸಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ.