– ನಿಖಿಲ್ ಕಿವಿಗೆ ಗಾಯ
ಮಂಡ್ಯ: ನಮ್ಮ ಪಕ್ಷದಲ್ಲಿ ಭಯೋತ್ಪಾದಕರಿಲ್ಲ. ಹೀಗಾಗಿ ಭಯ ಪಡುವ ಅಗತ್ಯವಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಸಚಿವ ಡಿ.ಸಿ ತಮ್ಮಣ್ಣ ಟಾಂಗ್ ನೀಡಿದ್ರು.
ಮದ್ದೂರಿನ ಬೋರಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಹೇಳಿಕೆಯಿಂದ ನನಗೆ ಭಯವಾಗುತ್ತಿದೆ ಎಂದಿದ್ದ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವೆಲ್ಲ ಸಭ್ಯರು. ನಮ್ಮ ನಡವಳಿಕೆ ನೋಡಿದ್ದೀರಲ್ಲ. ಅವರು ಸಂಬಂಧಿಕರೂ ಆಗಿದ್ದಾರೆ. ನಮ್ಮ ಪಕ್ಷದಲ್ಲಿ ಭಯೋತ್ಪಾದಕರು ಇಲ್ಲ. ಹಾಗಾಗಿ ನಮ್ಮನ್ನ ನೋಡಿ ಭಯ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ರು. ಇದನ್ನೂ ಓದಿ: ಸಿಎಂ ಹೇಳಿಕೆಯಿಂದ ನನಗೆ ಭಯವಾಗ್ತಿದೆ: ಸುಮಲತಾ
ಯಾರಿಗೆ ಯಾವ ಸಂದರ್ಭದಲ್ಲಿ ಭಯ ಆಗುತ್ತದೆ ಅನ್ನೋದು ನಮಗೆ ಗೊತ್ತಿಲ್ಲ. ಆದ್ರೆ ನಮ್ಮನ್ನ ನೋಡಿ ಭಯ ಪಡುವ ಅಗತ್ಯ ಇಲ್ಲ. ಮಂಡ್ಯದಲ್ಲಿ ವಾತಾವರಣ ಚೆನ್ನಾಗಿದೆ. ಎಲ್ಲ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸಿಎಂ ಎಚ್ ಡಿ ಕುಮಾರಸ್ವಾಮಿಯವರು ಇಂದು ಮಾತ್ರ ಮಂಡ್ಯದಲ್ಲಿ ಪ್ರಚಾರ ಮಾಡುತ್ತಾರೆ. ಮತ್ತೆ ಅವರು ಮಂಡ್ಯದಲ್ಲಿ ಪ್ರಚಾರ ಮಾಡುವುದಿಲ್ಲ ಅಂದ್ರು.
ನಿಖಿಲ್ ಕಿವಿಗೆ ಗಾಯವಾಗಿದ್ದರಿಂದ ಶುಕ್ರವಾರ ಪ್ರಚಾರಕ್ಕೆ ಹೋಗಿಲ್ಲ. ಇಂದಿನಿಂದ ನಿಖಿಲ್ ಅವರು ಸಹ ಪ್ರಚಾರದಲ್ಲಿ ಭಾಗಿಯಾಗುತ್ತಾರೆ. ಸುಮಲತಾ ಬಗ್ಗೆ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಆದ್ರೆ ಆ ರೀತಿ ಮಾತನಾಡಬಾರದು ಎಂದು ಪಕ್ಷ ಸೂಚನೆ ನೀಡಿದೆ. ಹೀಗಾಗಿ ಯಾರೂ ವೈಯಕ್ತಿಕವಾಗಿ ಟೀಕೆ ಮಾಡಬಾರದು ಎಂದು ಸಲಹೆಯಿತ್ತರು. ಇದನ್ನೂ ಓದಿ: ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ