ಮಂಡ್ಯ: ಪೊಲೀಸ್ ದಿನಾಚರಣೆಯ ಅಂಗವಾಗಿ ಮಂಡ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಲಾಯಿತು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಆರ್.ರವೀಂದ್ರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸರಿಗೆ ಸಾಕಷ್ಟು ಒತ್ತಡಗಳಿರುತ್ತವೆ. ಹೀಗಾಗಿ ಪ್ರತಿಯೊಬ್ಬರಿಗೂ ಆರೋಗ್ಯಕರ ವಾತಾವರಣದ ಅಗತ್ಯವಿದೆ. ಇದಕ್ಕೆ ಕ್ರೀಡೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸುವುದು ಒಳ್ಳೆಯ ಬೆಳವಣಿಗೆ. ಕ್ರೀಡೆ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಮಾತನಾಡಿ, ಕ್ರೀಡಾಕೂಟ ಆಯೋಜಿಸುವ ಮೂಲಕ ಎಲ್ಲ ಪೊಲೀಸ್ ಅಧಿಕಾರಿಗಳು ವರ್ಷಕ್ಕೊಮ್ಮೆ ಒಟ್ಟಿಗೆ ಸೇರುತ್ತೇವೆ. ಕ್ರೀಡಾಕೂಟದಿಂದ ಎಲ್ಲರೂ ಒಟ್ಟಿಗೆ ಸೇರುವುದು ಸಂತಸದ ಸಂಗತಿ. ಎರಡು ದಿನಗಳ ಕಾಲ ಎಲ್ಲರೂ ಬೆರೆಯಲು ಅವಕಾಶ ಸಿಗುತ್ತದೆ ಎಂದರು.
ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ವಿವಿಧ ವಿಭಾಗದ ಓಟ, ಕಬ್ಬಡ್ಡಿ, ಗುಂಡು ಎಸೆತ, ಚಕ್ರ ಎಸೆತ, ಭರ್ಜಿ ಎಸೆತ, ಉದ್ದ ಜಿಗಿತ, ಎತ್ತರ ಜಿಗಿತ, ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳು ಜರುಗುತ್ತವೆ.