ಮಂಡ್ಯ: ಫಲಿತಾಂಶ ಬರುವುದಕ್ಕೂ ಮುನ್ನವೇ, ಸುಮಲತಾ ಅಂಬರೀಶ್ ಗೆಲುವಿಗೆ ಸಹಕರಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದಗಳು ಎಂದು ಮಾಜಿ ಎಂಎಲ್ಸಿ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಅಶ್ವಥ್ ನಾರಾಯಣ್, ಸುಮಲತಾ ಈಗಾಗಲೇ ಗೆದ್ದಾಗಿದೆ. ಫಲಿತಾಂಶ ಬರುವುದೊಂದೆ ಬಾಕಿ ಉಳಿದಿದೆ. ನಾಗಮಂಗಲ ಮತ್ತು ಕೆ.ಆರ್ ಪೇಟೆಗೆ ತಾಲೂಕುಗಳಿಗೆ ಭೇಟಿ ನೀಡಿ ವರದಿ ಪಡೆದಿದ್ದೇನೆ. ಸುಮಲತಾ ಎಲ್ಲ ಕಡೆ ಲೀಡ್ ಪಡೆಯುತ್ತಾರೆ. ಹೀಗಾಗಿ ಅವರು ಗೆಲ್ಲುವುದು ನಿಶ್ಚಿತ ಎಂದು ಹೇಳಿ ಅಭಿನಂದನೆ ತಿಳಿಸಿದರು.
ಕೆ.ಆರ್ ಪೇಟೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳೇ ಗೆದ್ದು ಅಧಿಕಾರಕ್ಕೆ ಬರುತ್ತಾರೆ ಎಂದು ಅಶ್ವಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ನಿಂದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಅಖಾಡಕ್ಕೆ ಧುಮುಕಿದ್ದರು.
ಏಪ್ರಿಲ್ 18 ರಂದು ಮಂಡ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿದ್ದು, ಮೇ 23 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.