ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಬಗ್ಗೆ ಜನರು ಗೊಂದಲದಲ್ಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈ ಗೊಂದಲವನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಆಶಾ ಕಾರ್ಯಕರ್ತೆಯರು ಮನೆ ಮನೆ ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರು, ಅದರಲ್ಲೂ ಮುಸ್ಲಿಂ ಸಮುದಾಯದವರು ತಮ್ಮ ಮಾಹಿತಿಯನ್ನು ಯಾರಿಗೂ ನೀಡಲು ತಯಾರಿಲ್ಲದ ಸ್ಥಿತಿ ಇದೆ. ಹೀಗಾಗಿ ಸರ್ಕಾರ ಈ ಬಗ್ಗೆ ಸರಿಯಾದ ಸ್ಪಷ್ಟನೆ ಕೊಡಬೇಕು ಎಂದು ಕೇಳಿಕೊಂಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಯಾವುದೇ ಮಾಹಿತಿ ಕಲೆ ಹಾಕಲು ಆದೇಶ ಕೊಟ್ಟಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ರಾಜ್ಯದ ಜನತೆಗೆ ವಿಶ್ವಾಸ ಬರುವಂತೆ ಮಾಹಿತಿ ನೀಡಬೇಕು. ಯಾಕೆಂದರೆ ಸದ್ಯ ಜನರು ಗೊಂದಲಕ್ಕೆ ಒಳಗಾಗಬಾರದು. ಸಾರ್ವಜನಿಕರ ಗೊಂದಲ ನಮಗೆ ಅರ್ಥವಾಗುತ್ತದೆ. ವಿಶ್ವಾಸ ಕಡಿಮೆಯಾದಾಗ ಜನರಿಗೆ ಸಂಶಯ ಹೆಚ್ಚಾಗುತ್ತದೆ ಎಂದು ಹೇಳಿದರು.
ಜನವರಿ 19ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ಇದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಮಾಹಿತಿ ಪಡೆಯಲು ಬಂದಾಗ ಯಾರೂ ಗೊಂದಲಕ್ಕೀಡಾಗಬಾರದು. ಆಶಾ ಕಾರ್ಯಕರ್ತೆಯರು ಮನೆಮನೆ ಸಂಪರ್ಕ ಹೊಂದಿರುತ್ತಾರೆ. ಜನ ಇದಕ್ಕೆ ಸಹಕಾರ ಕೊಡಬೇಕು ಎಂದು ಯು.ಟಿ.ಖಾದರ್ ಮನವಿ ಮಾಡಿಕೊಂಡರು.