ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ನಕ್ಸಲ್ ಮುಖಂಡ ಕರ್ನಾಟಕ, ತಮಿಳುನಾಡು ಪೊಲೀಸರಿಗೆ ಬೇಕಾಗಿರುವ ವಿಕ್ರಮ್ ಗೌಡನೇ ಶೂಟೌಟ್ ಮಾಡಿಸಿದ್ದಾನಾ ಎನ್ನುವ ಶಂಕೆ ಈಗ ವ್ಯಕ್ತವಾಗಿದೆ.
ಹೌದು. ಈ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) 7 ಮಂದಿಯ ಪಟ್ಟಿಯನ್ನು ಸಿದ್ಧಪಡಿಸಿದ್ದು, ಈ ಪಟ್ಟಿಯಲ್ಲಿ ವಿಕ್ರಮ್ ಗೌಡನಿಗೆ ಆಗ್ರಸ್ಥಾನ ಸಿಕ್ಕಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ. ಎಸ್ಐಟಿ ಈಗ ವಿಕ್ರಮ್ ಗೌಡ ಮತ್ತು ಐವರು ಸಹಚರರ ಬೆನ್ನುಬಿದ್ದಿದ್ದು, ತನಿಖೆಯನ್ನು ತೀವ್ರಗೊಳಿಸಿದೆ.
ನಕ್ಸಲರಿಂದ ಹತ್ಯೆ ಆಗಿರಬಹುದಾ ಎನ್ನುವ ಅನುಮಾನ ಬಂದಿರುವ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರು ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಗೌರಿ ಲಂಕೇಶ್ ಅವರ ಮನೆಯನ್ನು ತಪಾಸಣೆ ಮಾಡಿದ್ದರೆ, ಇಂದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಛತ್ತೀಸ್ಗಢ ಪೊಲೀಸರು ಎಸ್ಐಟಿಯಿಂದ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.
ದ್ವೇಷ ಯಾಕೆ?
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಮ್ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಈ ಕಾರಣಕ್ಕೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರಬಹುದಾ ಎನ್ನುವ ಪ್ರಶ್ನೆಯನ್ನು ಇಟ್ಟುಕೊಂಡು ತನಿಖೆ ಮುಂದುವರಿದಿದೆ.
ಯಾರು ಈ ವಿಕ್ರಮ್ ಗೌಡ?
ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಮ್ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಮ್ ಗೌಡ ಹೆಗಲಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.
20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಮ್ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಮ್ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದಾನೆ. ಕಳೆದ ವರ್ಷ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ ವಿಕ್ರಮ್ ಗೌಡ ಸದ್ಯ ಕೇರಳದಲ್ಲಿ ಅಡಗಿದ್ದಾನೆ ಎಂದು ಹೇಳಲಾಗುತ್ತಿದೆ.
ಗೌರಿ ಲಂಕೇಶ್ ಕಳೆದ ನಾಲ್ಕು ವರ್ಷಗಳಲ್ಲಿ ನಕ್ಸಲರಾದ ಸಿರಿಮನೆ ನಾಗರಾಜು, ನೂರ್ ಜುಲ್ಫೀಕರ್ ಶ್ರೀಧರ್, ಕನ್ಯಾಕುಮಾರಿ, ರಾಜು ಅಲಿಯಾಸ್ ಪರಶುರಾಮ್, ಶಿವು, ಚೆನ್ನಮ್ಮ, ನಿಲಗುಳಿ ಪದ್ಮನಾಭ್, ರಿಜ್ವಾನ್ ಬೇಗಂ, ಕಲ್ಪನಾ ಇವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತಂದಿದ್ದರು.
https://youtu.be/9i4m_pe6Ir4
https://youtu.be/UpTSQC0W05M