ವಿಜಯಪುರ: ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿನಲ್ಲಿ 60%ಕ್ಕಿಂತಲೂ ಹೆಚ್ಚಿನ ಮಳೆಯ ಕೊರತೆ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಆಧರಿಸಿ ರೈತ ಸಮುದಾಯಕ್ಕೆ ಹೆಚ್ಚಿನ ನೆರವು ನೀಡುವಂತೆ ಕೋರಿ ಜಿಲ್ಲಾ ಉಸ್ತುವಾರಿ ಮತ್ತು ಭಾರೀ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ (M.B Patil) ಅವರು ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡಕ್ಕೆ ಶುಕ್ರವಾರ ಪತ್ರ ಬರೆದು ಆಗ್ರಹಿಸಿದ್ದಾರೆ.
ಸಚಿವರು ಅಮೆರಿಕ ಪ್ರವಾಸದಲ್ಲಿ ಇರುವ ಕಾರಣ ಅವರ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಬರ ಅಧ್ಯಯನ ತಂಡಕ್ಕೆ ನೀಡಲಾಯಿತು. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ತಿಕೋಟಾ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಈ ತಾಲೂಕಿನಲ್ಲಿ ಮುಂಗಾರಿನಲ್ಲಿ ಕೇವಲ ಒಂದು ದಿನ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೆ.1ರಂದೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ತಾವೂ ಸಹ ವೈಯಕ್ತಿಕವಾಗಿ ಸೆ.14ರಂದು ಮುಖ್ಯಮಂತ್ರಿಗಳಿಗೆ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದು ಈ ವಿಚಾರವನ್ನು ಗಮನಕ್ಕೆ ತಂದಿದ್ದೇನೆ. ಹೀಗಾಗಿ ಕೇಂದ್ರ ತಂಡವು ಈ ವಾಸ್ತವಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: Asian Games 2023: ಜಪಾನ್ ಮಣಿಸಿ ಚಿನ್ನದ ಹಾರ ʻಹಾಕಿʼಕೊಂಡ ಭಾರತ – ಪ್ಯಾರಿಸ್ ಒಲಿಂಪಿಕ್ಸ್ಗೆ ಗ್ರೀನ್ ಸಿಗ್ನಲ್!
ಜಿಲ್ಲೆಯಲ್ಲಿ ರೈತರು ಉತ್ತಮ ಮಳೆಯನ್ನು ನಿರೀಕ್ಷಿಸಿ ಮೆಕ್ಕೆಜೋಳ, ಶೇಂಗಾ, ಕಡಲೆ, ಹತ್ತಿ, ತೊಗರಿ, ಸಜ್ಜೆ, ಮೆಣಸಿನಕಾಯಿ, ಕಬ್ಬು ಮತ್ತು ಅಕ್ಕಡಿ ಕಾಳುಗಳ ಬಿತ್ತನೆ ಮಾಡಿದ್ದರು. ಆದರೆ ಮಳೆ ತೀವ್ರವಾಗಿ ಕೈಕೊಟ್ಟು, ಬೆಳೆಗಳೆಲ್ಲವೂ ಮೊಳಕೆಯಲ್ಲೇ ಮುರುಟಿ ಹೋಗಿವೆ. ಕೊಳವೆ ಬಾವಿ ಮತ್ತು ತೆರೆದ ಬಾವಿಗಳು ಕೂಡ ಬತ್ತಿ ಹೋಗಿದ್ದು, ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಪರಿಸ್ಥಿತಿ ಇದೆ ಎಂದು ಅವರು ಕೇಂದ್ರ ತಂಡದ ಗಮನ ಸೆಳೆದಿದ್ದಾರೆ.
ಜಿಲ್ಲೆಯ ಎಲ್ಲ 13 ತಾಲೂಕುಗಳಲ್ಲೂ ಈ ಬಾರಿ ಮಳೆಯ ತೀವ್ರ ಕೊರತೆ ಎದುರಾಗಿದೆ. ಇದರಿಂದಾಗಿ ರೈತರು, ಕೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳು ಕಂಗಾಲಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರವು ಇವರೆಲ್ಲರ ನೆರವಿಗೆ ನಿಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ನೈಜ ಸ್ಥಿತಿ ಮತ್ತು ರೈತರ ಮನವಿಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗುವಂತೆ ವರದಿ ನೀಡಬೇಕು ಎಂದು ಸಚಿವರು ಮನವಿ ಮಾಡಿಕೊಂಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]