ಬೆಂಗಳೂರು: ರಾಜ್ಯದಲ್ಲಿ ಶಾಹೀನ್ ಚಂಡಮಾರುತ ಪ್ರಭಾವ ಬೀರಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಅಕ್ಟೋಬರ್ 5 ರಿಂದ ಎರಡು ದಿನ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ. ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಅಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನಲ್ಲೂ ಮಳೆಯಾಗಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ.
ಇಂದು ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು, ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ರಾತ್ರಿ ಬೆಂಗಳೂರು ನಗರದಲ್ಲಿ ಸಹ ಕೆಲ ಹೊತ್ತು ಮಳೆ ಸುರಿದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣ ಮಳೆ – ಮನೆ, ಅಂಗಡಿಗಳಿಗೆ ನುಗ್ಗಿದ ನೀರು
ಎಲ್ಲೆಲ್ಲಿ ಭಾರೀ ಮಳೆಯ ನಿರೀಕ್ಷೆ?
ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಸಹ ಇಂದು ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಅ.4 ಮತ್ತು 5 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತದ ಕೆಲ ರಾಜ್ಯಗಳು, ವಿದರ್ಭ, ಮರಾಠವಾಡ, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: 20 ವರ್ಷ ಸೇನೆಯಲ್ಲಿ ಸೇವೆ- ನಿವೃತ್ತಿಯಾಗಿ ಹುಟ್ಟೂರಿಗೆ ಆಗಮಿಸಿದ ಸೈನಿಕ
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಅ.4 ಮತ್ತು 5 ರಂದು ಭಾರೀ ಮಳೆ ಸುರಿಯುವ ನಿರೀಕ್ಷೆ ಇರುವ ಕಾರಣ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರಕ್ಕೆ 5 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.