ಬೆಂಗಳೂರು: ಕ್ಯಾರ್ ಹಾಗೂ ಮಹಾ ಚಂಡಮಾರುತಗಳ ಅಬ್ಬರ ಮುಗಿಯುವ ಮುನ್ನವೇ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ.
ನವೆಂಬರ್ 6ರ ಬಳಿಕ ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಿಂದೂ ಮಹಾಸಾಗರದ ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.
ಈಗಾಗಲೇ ತಲ್ಲಣ ಮೂಡಿಸಿರುವ ಮಹಾ ಚಂಡಮಾರುತ ಮತ್ತೆ ವಾಪಸ್ ಗುಜರಾತ್ ಹಾಗೂ ಮಹಾರಾಷ್ಟ್ರದ ಕಡೆ ಬರಲಿದೆ. ಇದರಿಂದ ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.