ಕಲಬುರಗಿ: ಬೆಂಗಳೂರು ಮೆಟ್ರೋ (Namma Metro) ಟಿಕೆಟ್ ದರ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಅನಗತ್ಯವಾಗಿ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿಯ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಕೇಂದ್ರದಿಂದ ಪತ್ರ ಬಾರದೇ ಇದ್ದರೆ ಮೆಟ್ರೋ ದರ ಏರಿಕೆ ಫಿಕ್ಸ್
ಮೆಟ್ರೋ ದರ ಪರಿಷ್ಕರಣೆ ಮಾಡುವ ಸಂಪೂರ್ಣ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಈ ಸತ್ಯ ಗೊತ್ತಿದ್ದರೂ ಬಿಜೆಪಿಯವರು ಏನಾದರೂ ನೆಪ ಸಿಗುತ್ತದೆಯೇ ಎಂದು ಕಾಯುತ್ತಿರುತ್ತಾರೆ. ಟಿಕೆಟ್ ವಿಚಾರದಲ್ಲೂ ನಮ್ಮ ಮೇಲೆ ಗೂಬೆ ಕೂರಿಸಲು ನೋಡಿದರು. ಆದರೆ, ಈಗ ನಿಜಾಂಶ ಬಯಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಅಧಿಕೃತವಾಗಿ ಪತ್ರ ಬರೆದಿದ್ದು, ದರ ಪರಿಷ್ಕರಣಾ ಸಮಿತಿ ರಚಿಸುವಂತೆ ಕೋರಿದ್ದಾರೆ. ಹೀಗಿರುವಾಗ ಬಿಜೆಪಿ ಸಂಸದರು ನಮ್ಮ ಮೇಲೆ ಆರೋಪ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ ಎಂದು ಸಚಿವರು ಸವಾಲು ಹಾಕಿದರು.

ಇವಿಎಂ ಗೊಂದಲ ಮತ್ತು ಬ್ಯಾಲೆಟ್ ಪೇಪರ್ ಬಳಕೆ:
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಬಿಜೆಪಿಯ ವಿರೋಧದ ಕುರಿತು ಮಾತನಾಡಿದ ಅವರು, ವಿಶ್ವದ ಮುಂದುವರಿದ ರಾಷ್ಟ್ರಗಳೇ ಇವಿಎಂ ನಂಬದೆ ಬ್ಯಾಲೆಟ್ ಪೇಪರ್ ಬಳಸುತ್ತಿವೆ. ದೇಶದಲ್ಲಿ ಇವಿಎಂ ಕುರಿತು ಸಾರ್ವಜನಿಕರಲ್ಲಿ ಮತ್ತು ರಾಜಕೀಯ ಪಕ್ಷಗಳಲ್ಲಿ ಸಾಕಷ್ಟು ಸಂಶಯಗಳಿವೆ. ಚುನಾವಣಾ ಆಯೋಗವು ಈ ಗೊಂದಲಗಳನ್ನು ಪರಿಹರಿಸುವ ಕೆಲಸ ಮಾಡಿಲ್ಲ. ಹೀಗಾಗಿ, ಪಾರದರ್ಶಕ ಮತ್ತು ವಿಶ್ವಾಸಾರ್ಹವಾಗಿ ಚುನಾವಣೆ ನಡೆಸಲು ನಾವು ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.
ಪಕ್ಷದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಸಚಿವ ಗುಂಡೂರಾವ್, ಯತೀಂದ್ರ ಅವರು ಯಾವ ಸಂದರ್ಭದಲ್ಲಿ ಆ ಮಾತು ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಸಿಎಂ ಮತ್ತು ಡಿಸಿಎಂ ಇಬ್ಬರೂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್
ಯೋಗದ ಬಗ್ಗೆ ಹೇಳಲು ನಾನೇನು ಜ್ಯೋತಿಷಿಯಲ್ಲ:
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆಯೇ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ಯಾರ್ಯಾರಿಗೆ ಏನೇನು ಯೋಗ ಇದೆ ಎಂದು ಹೇಳಲು ನಾನೇನು ಜ್ಯೋತಿಷಿಯಲ್ಲ. ರಾಜಕೀಯದಲ್ಲಿ ಎಲ್ಲವೂ ಕಾಲಕ್ಕೆ ತಕ್ಕಂತೆ ನಡೆಯುತ್ತದೆ ಎಂದು ಚಟಾಕಿ ಹಾರಿಸಿದರು.

