ಬೆಂಗಳೂರು: ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಬಗ್ಗೆ ನನಗೆ ಮೂರು ದಿನಗಳ ಹಿಂದೆಯೇ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಜ್ಞರ ಜೊತೆಗೆ ಮಾತುಕತೆ ನಡೆಸಿ ತನಿಖೆಗೆ ಆದೇಶ ನೀಡಿರುವೆ. ಬೈಯಪ್ಪನಹಳ್ಳಿ ಮೈಸೂರು ರಸ್ತೆ ಸಂಚಾರ ಸ್ಥಗಿತಕ್ಕೂ ಸೂಚನೆ ನೀಡಿರುವೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು.
ಈಗಾಗಲೇ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮೆಟ್ರೋ ವೇಗವನ್ನು ಕಡಿಮೆ ಮಾಡಿ ಸಂಚಾರ ನಡೆಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಚ್ಚರಿಕೆ ಉದ್ದೇಶದಿಂದ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದೇನೆ. ಅಲ್ಲದೆ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿರುವೆ ಎಂದು ಕುಮಾರಸ್ವಾಮಿ ಹೇಳಿದರು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರುವ ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ನನಗೆ ಮಾಹಿತಿಯಿಲ್ಲ. ಈ ಬಗ್ಗೆ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹಾರಿಕೆಯ ಉತ್ತರ ಕೊಟ್ಟಿದ್ದರು.
https://www.youtube.com/watch?v=KoPKGJPuua8
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv