ಬೆಂಗಳೂರು: ತಡರಾತ್ರಿ ಇಬ್ಬರು ರೌಡಿಶೀಟರ್ ಗಳನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ.
ಮುರುಗನ್ ಹಾಗೂ ಪಳನಿ ಕೊಲೆಯಾದ ರೌಡಿಶೀಟರ್ ಗಳು. ಬುಧವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ಇಬ್ಬರನ್ನು ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಬರುವ ವಿವರ್ಸ್ ಕಾಲೋನಿಯಲ್ಲಿ ಬರ್ಬರವಾಗಿ ಅಟ್ಟಾಡಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಕಳೆದ ವಾರ ಪಳನಿ, ಮುರುಗನ್ ಮತ್ತು ಮಂಜನ ಟೀಂನವರು ಬರ್ತ್ ಡೆ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಹಳೆಯ ರೌಡಿಶೀಟರ್ ಗಳೆಲ್ಲಾ ಬಂದಿದ್ದರು. ಈ ವೇಳೆ ಪಳನಿ ಮತ್ತು ಮುರುಗನ್ ಟೀಂ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ತಡರಾತ್ರಿ ಕುಡಿದು ಬೈಕಿನಲ್ಲಿ ವಾಪಸ್ಸು ತೆರಳುತ್ತಿದ್ದ ಮುರುಗನ್ ಹಾಗೂ ಪಳನಿ ಮೇಲೆ ಆಟೋದಲ್ಲಿ ಬಂದಿದ್ದ 8 ಜನರ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದ್ದು, ಸದ್ಯ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv