ಚಿತ್ರದುರ್ಗ: ಅನಾರೋಗ್ಯ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ರದುರ್ಗ (Chitradurga) ಉಸ್ತುವಾರಿ ಸಚಿವ ಡಿ.ಸುಧಾಕರ್ (D Sudhakar) ನಿಧನರಾಗಿದ್ದಾರೆ.
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧಾಕರ್ ಇಂದು ಬೆಳಗ್ಗೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಧಾಕರ್ ನಿಧನದ ಕುರಿತು ಕಿಮ್ಸ್ ಆಸ್ಪತ್ರೆ ಅಧಿಕೃತ ಘೋಷಣೆ ಮಾಡಿದೆ.
ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುಧಾಕರ್ ಅಂತಿಮ ದರ್ಶನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಳಿಕ ಬಳಿಕ ಸ್ವಕ್ಷೇತ್ರ ಹಿರಿಯೂರು ನೆಹರು ಮೈದಾನದಲ್ಲಿ ಅಂತಿಮ ದರ್ಶನ ನಡೆಯಲಿದ್ದು, ನಂತರ ಅಲ್ಲಿಂದ ಚಳ್ಳಕೆರೆ ಡಿ.ಸುಧಾಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಪ್ಲಾನ್ ಮಾಡಲಾಗಿದೆ. ಸದ್ಯ ಚಳ್ಳಕೆರೆ ಪಟ್ಟಣದ ಸಚಿವ ಡಿ. ಸುಧಾಕರ್ ಮನೆ ಬಳಿ ನೀರವ ಮೌನ ಆವರಿಸಿದೆ.

