ರಾಮನಗರ: ಕಾಂಗ್ರೆಸ್ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇರುವವರು ಪಕ್ಷಕ್ಕೆ ಬನ್ನಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಸಚಿವ ಡಿಕೆ ಶಿವಕುಮಾರ್ ಬಹಿರಂಗ ಆಹ್ವಾನ ನೀಡಿದ್ದಾರೆ. ಈ ಮೂಲಕ ಚನ್ನಪಟ್ಟಣ ಮಾಜಿ ಶಾಸಕ ಸಿ ಪಿ ಯೋಗೇಶ್ವರ್ ಗೆ ಪರೋಕ್ಷವಾಗಿ ಚಮಕ್ ಕೊಟ್ಟಿದ್ದಾರೆ.
ಸಚಿವ ಡಿ.ಕೆ ಶಿವಕುಮಾರ್ ತಮ್ಮ ಅಧಿಕೃತ ಲೆಟರ್ ಹೆಡ್ನ ಮೂಲಕ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ. ಹೊಸ ವರ್ಷದ ಆರಂಭ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಲ್ಲಿ ನಂಬಿಕೆ ಇರುವ ಚನ್ನಪಟ್ಟಣದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ. ತಾಲೂಕಿನ ಕೆಲ ಬಿಜೆಪಿ ಮುಖಂಡರ ಸ್ವಾರ್ಥದಿಂದ ಬೇಸತ್ತಿರುವುದಾಗಿ ಅನೇಕ ಮುಖಂಡರು, ಕಾರ್ಯಕರ್ತರು ತಮ್ಮ ಬಳಿ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಸೇರಲು ಉತ್ಸುಕರಾಗಿರುವುದಾಗಿ ತಿಳಿಸಿದ್ದಾರೆ.
ತಮ್ಮಲ್ಲಿ ಯಾವುದೇ ಸರ್ವಾಧಿಕಾರಿ ಧೋರಣೆ ಇರುವುದಿಲ್ಲ. ಸಮಬಾಳು, ಸಮಪಾಲಿನ ಅಡಿಯಲ್ಲಿ ನಡೆದುಕೊಳ್ಳಲಾಗುತ್ತೆ. ಯಾವಾಗಲು ಪಕ್ಷದ ಬಾಗಿಲು ತೆರೆದಿದ್ದು ಮುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಸಚಿವ ಡಿಕೆ ಶಿವಕುಮಾರ್ ಆಹ್ವಾನ ನೀಡಿರುವುದಾಗಿ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv