ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು-ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಬೇಕು. ಇದರಿಂದ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.
ಮಹಿಳಾ ವಿ.ವಿ ಮುಚ್ಚುತ್ತಾರೆ ಎಂಬ ವದಂತಿಗೆ ಸ್ಪಷ್ಟನೆ ನೀಡಿದ ಅವರು, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವುದು ನನ್ನ ಕರ್ತವ್ಯವಾಗಿದೆ. ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು. ಅದರಂತೆ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಅಳಿಲು ಸೇವೆಯ ಸೌಭಾಗ್ಯವು ನನ್ನದಾಗಿದೆ. ವಿಶ್ವವಿದ್ಯಾಲಯ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ
ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಲಾಗುವುದು. ಈ ಮೂಲಕ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿ ಅವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು. ಇಂತಹ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ವಿನಂತಿಕೊಂಡಿದ್ದಾರೆ. ಇದನ್ನೂ ಓದಿ: ಪುಷ್ಪ ಸಿನಿಮಾ ನೋಡಿ 24 ವರ್ಷದ ಯುವಕನ ಬರ್ಬರ ಹತ್ಯೆ – ಮೂವರು ಅರೆಸ್ಟ್