-ವಿದೇಶದಿಂದ ಟ್ರಬಲ್ ಶೂಟರ್ ಆಗಿ ಬಂದ್ರಾ ಸಿದ್ದರಾಮಯ್ಯ?
ಬೆಳಗಾವಿ: ಕಾಂಗ್ರೆಸ್ನಲ್ಲಿ ಭಿನ್ನಮತ ತೀವ್ರಗೊಂಡಿದ್ದರಿಂದ ವಿದೇಶಿ ಪ್ರವಾಸದಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ದಿಢೀರ್ ಕರೆಸಿಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಾಸಕರು ಬಂಡಾಯ ಎದ್ದಿದ್ದಾರೆ ಅಂತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುಪ್ತಚರ ಇಲಾಖೆ ಮೂಲಕ ಮಾಹಿತಿ ಪಡೆದಿದ್ದರು. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ಗೆ ಮಾಹಿತಿ ರವಾನೆ ಮಾಡಿದ್ದಾರೆ. ಇದರಿಂದಾಗಿ ಎಚ್ಚೆತ್ತುಕೊಂಡ ಹೈಕಮಾಂಡ್ ವಿದೇಶದಲ್ಲಿದ್ದ ಸಿದ್ದರಾಮಯ್ಯ ಅವರನ್ನು ರಾಜ್ಯಕ್ಕೆ ಮರಳಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡದೆಯಂತೆ. ಹೀಗಾಗಿ ನಿನ್ನೆ ರಾತ್ರಿಯೇ ಮಾಜಿ ಸಿಎಂ ಮಲೇಷಿಯಾದಿಂದ ಬೆಂಗಳೂರಿಗೆ ಮರಳಿದ್ದಾರೆ ಎನ್ನುವ ವಿಚಾರವನ್ನು ಮೂಲಗಳು ತಿಳಿಸಿವೆ.
ಬಂಡಾಯ ನಾಯಕರು ಯಾರು?:
ಪೌರಾಡಳಿತ ಸಚಿವ ರಮೇಶ್ ಜಾರಕಿಹೋಳಿ, ಶಾಸಕ ನಾಗೇಂದ್ರ ಸೇರಿದಂತೆ ಒಟ್ಟು 16 ರಿಂದ 18 ಜನ ಶಾಸಕರು ಸ್ವಪಕ್ಷ ಕಾಂಗ್ರೆಸ್ ವಿರುದ್ಧವೇ ಬಂಡಾಯ ಎದ್ದಿದ್ದಾರಂತೆ. ಅಷ್ಟೇ ಅಲ್ಲದೆ ನಾಳೆ ಸಂಜೆ ಪ್ರವಾಸದ ನೆಪದಲ್ಲಿ ರೆಸಾರ್ಟ್ಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಅಲ್ಲಿಂದ ಗೋವಾಗೆ ತೆರಳಿ ವಿಶೇಷ ವಿಮಾನದ ಮೂಲಕ ಅಹ್ಮದಾಬಾದ್ಗೆ ಹೋಗಲಿದ್ದಾರಂತೆ.
ಅಹ್ಮದಾಬಾದ್ನಲ್ಲಿ ಇದ್ದು ಸೋಮವಾರ ನೇರವಾಗಿ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಬಂದಿಳಿಯಲು ಶಾಸಕರು ಪ್ಲಾನ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸ್ಪೀಕರ್ ರಮೇಶ್ ಕುಮಾರ್ ಅವನ್ನು ಭೇಟಿ ಮಾಡಿ ಸೋಮವಾರವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಇದೇ ಬೆಳಗಾವಿ ಅಧಿವೇಶನದಲ್ಲಿಯೇ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬಂಡಾಯ ಎದ್ದಿರುವ ಶಾಸಕರನ್ನು ಭೇಟಿಯಾಗಲು ಹಾಗೂ ಅವರೊಂದಿಗೆ ಮಾತುಕತೆ ನಡೆಸಲು ಮಾಜಿ ಸಿಎಂ ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ. ಆದರೆ ಸಿದ್ದರಾಮಯ್ಯ ಮಾತಿಗೆ ಭಿನ್ನಮತ ಶಾಸಕರು ಮಣಿಯುತ್ತಾರಾ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv