ಬೆಂಗಳೂರು: ಅನ್ಯ ಶಾಲೆಗಳಲ್ಲಿ ಕೆಲಸ ನಿರ್ವಹಿಸಿಸುತ್ತಿರುವ ಶಿಕ್ಷಕರು ತಾವು ಇರುವ ಸ್ಥಳದಲ್ಲಿ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಈ ಕುರಿತು ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದು, ಬೇರೆ ಬೇರೆ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ತಾವಿರುವ ಊರು ಅಥವಾ ನಗರದ ಶಾಲೆಗಳಲ್ಲೇ ಕಾರ್ಯನಿರ್ವಹಿಸಬೇಕು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ಸದ್ಯ ಇರುವ ಸ್ಥಳದಲ್ಲಿ ಕೆಲಸ ಮುಂದುವರೆಸುವಂತೆ ತಿಳಿಸಿದ್ದಾರೆ. ಸರ್ಕಾರದ ಅನುಮತಿ ಮೇರೆಗೆ ಸುರೇಶ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದು, ಶಿಕ್ಷಕರು ತಾವಿರುವ ಸ್ಥಳದಲ್ಲೇ ಕಾರ್ಯನಿರ್ವಹಿಸಬಹುದಾಗಿದೆ.
ಇದೆಲ್ಲದರ ಮಧ್ಯೆ ಈ ಬಾರಿ ಶುಲ್ಕ ಹೆಚ್ಚಳ ಮಾಡದಂತೆ ಖಾಸಗಿ ಶಾಲೆಗಳಿಗೆ ನಿರ್ದೇಶನ ನೀಡಲಾಗಿದ್ದು, ಕೊರೊನಾ ಹಿನ್ನೆಲೆ ಯಾವುದೇ ಖಾಸಗಿ ಶಾಲೆ ಶುಲ್ಕವನ್ನು ಹೆಚ್ಚಳ ಮಾಡಕೂಡದು ಎಂದು ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.
ಕ್ಷೌರಿಕ ಹಾಗೂ ದಂತ ವೈದ್ಯಕೀಯ ಚಿಕಿತ್ಸೆಯನ್ನು ಸಹ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಗಳಿವೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದು ಮನವಿ ಮಾಡಿದ್ದಾರೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕ್ಷೌರಿಕ ವೃತ್ತಿ(ಸವಿತಾ ಸಮಾಜ)ಯವರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ದಂತ ವೈದ್ಯಕೀಯ ಚಿಕಿತ್ಸೆಯೂ ಅವಶ್ಯಕವಾಗಿದೆ. ಈ ಎರಡು ವಲಯಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಪ್ರಾರಂಭ ಮಾಡಲು ಅವಕಾಶ ಕೊಡಬೇಕು ಎಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.