ಗಾಂಧಿನಗರ: ಅತ್ಯಾಚಾರ ಸಂತ್ರಸ್ತೆಗೆ ಎರಡು ಬೈಕಿನಲ್ಲಿ ದುಷ್ಕರ್ಮಿಗಳು ಬಂದು ವಿಷಕುಡಿಸಿರುವ ಘಟನೆ ಗುಜರಾತ್ನ ದ್ವಾರಕ ಜಿಲ್ಲೆಯ ಹಠತಾಳ ಪ್ರದೇಶದಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತ ಬಾಲಕಿ ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆರೋಪಿಗಳು ಈ ರೀತಿಯ ಕೃತ್ಯ ಎಸಗಿದ್ದಾರೆ.
ಏನಿದು ಪ್ರಕರಣ?
ಸಂತ್ರಸ್ತೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಳು. ಆಗ ಎರಡು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯನ್ನು ಅಡ್ಡಗಟ್ಟಿ ತಮ್ಮ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಬಾರದು ಎಂದು ಬೆದರಿಸಿದ್ದು, ಇದಕ್ಕೆ ಬಾಲಕಿ ಒಪ್ಪಲಿಲ್ಲ. ಬಳಿಕ ದುಷ್ಕರ್ಮಿಗಳು ಬಾಲಕಿಗೆ ಬಲವಂತವಾಗಿ ವಿಷ ಕುಡಿಸಿದ್ದಾರೆ. ವಿಷ ಕುಡಿಸಿದ ಬಳಿಕ ಆರೋಪಿ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವೇಳೆ ಅಸ್ವಸ್ಥಗೊಂಡ ಬಾಲಕಿಯನ್ನು ನೋಡಿ ಆಟೋರಿಕ್ಷಾದಲ್ಲಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯಕ್ಕೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಹೇಳಿದ್ದಾರೆ.
ಬಾಲಕಿಯ ಕುಟುಂಬದವರು ಈ ಬಗ್ಗೆ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆ ಪೋಷಕರ ದೂರಿನ ಆಧಾರದ ಮೇರೆಗೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ತನಿಖೆಯ ಮೊದಲ ಹಂತದಲ್ಲಿಯೇ ಈ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದವರು ಈ ಪ್ರಕರಣವನ್ನು ಮುಚ್ಚಿಹಾಕಲು ಈ ಕೃತ್ಯವೆಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಇಬ್ಬರು ಆರೋಪಿಗಳು ಇತ್ತೀಚೆಗೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯಕ್ಕೆ ಪ್ರಕರಣದ ತನಿಖೆ ಆರಂಭಿಸಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv