ಬಳ್ಳಾರಿ: ಬಳ್ಳಾರಿ ಕಾಂಗ್ರೆಸ್ ನಾಯಕರ ನಡುವೆ ಆರಂಭವಾಗಿದ್ದ ಕಿತ್ತಾಟಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಬ್ರೇಕ್ ಹಾಕಲು ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದು, ಶಾಸಕ ಆನಂದ್ ಸಿಂಗ್ ಹಾಗೂ ಭೀಮಾನಾಯ್ಕ ನಡುವಿನ ಅಸಮಾಧಾನವನ್ನು ಶಮನಗೊಳಿಸಲು ಯಶಸ್ವಿಯಾಗಿದ್ದಾರೆ.
ಈಗಲ್ಟನ್ ರೆಸಾರ್ಟಿನಲ್ಲಿ ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ನಡುವೆ ಜಗಳ ನಡೆಯಲು ಪ್ರಮುಖ ಕಾರಣವೇ ಭೀಮಾನಾಯ್ಕ್ ನಡುವಿನ ಅಸಮಾಧಾನ. ಸದ್ಯ ಇಬ್ಬರ ನಡುವಿನ ಗುದ್ದಾಟಕ್ಕೆ ಬ್ರೇಕ್ ಹಾಕಿರುವ ಕೆಪಿಸಿಸಿ ಮೊದಲ ಹಂತವಾಗಿ ಹಗರಿಬೊಮ್ಮನಹಳ್ಳಿಯಲ್ಲಿ ಆನಂದ್ ಸಿಂಗ್ ಅಭಿಮಾನಿ ಬಳಗ ತೆರೆದಿದ್ದ ಕಚೇರಿಯನ್ನು ತೆರವುಗೊಳಿಸಲು ಯಶಸ್ವಿಯಾಗಿದ್ದಾರೆ.
ಕಳೆದ ಮೂರು ತಿಂಗಳ ಹಿಂದೆ ಶಾಸಕ ಭೀಮಾನಾಯ್ಕ್ ಕ್ಷೇತ್ರದಲ್ಲಿ ಆನಂದ್ ಸಿಂಗ್ ಅಭಿಮಾನಿಗಳು ಕಚೇರಿ ತೆರೆದು ಸಾಮಾಜಿಕ ಕಾರ್ಯಗಳನ್ನು ನಡೆಸಲು ಆರಂಭಿಸಿದ್ದರು. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಸಂಧಾನ ಸಫಲವಾದ ಕಾರಣ ಇಂದು ಬೆಳಗ್ಗೆ ಕಚೇರಿಯನ್ನು ತೆರವುಗೊಳಿಸಲಾಗಿದೆ.
ಇತ್ತ ಆನಂದ್ ಸಿಂಗ್ ಹಾಗು ಭೀಮಾನಾಯ್ಕ್ ನಡುವೆ ಸಂಧಾನ ಯಶಸ್ವಿಯಾಗುತ್ತಿದಂತೆ ಕೆಪಿಸಿಸಿ ನಾಯಕರು ಕಂಪ್ಲಿ ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ನಡುವೆ ಸಂಧಾನ ಮಾಡಲು ಪ್ರಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv