ರಾಯಚೂರು: ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸಿಇಒ ಹಾಗೂ ಶಾಸಕ ದಿಢೀರ್ ಭೇಟಿ ನೀಡಿ ವೈದ್ಯರಿಗೆ ತರಾಟೆ ತೆಗೆದುಕೊಂಡರು.
ಜಿಲ್ಲಾ ಪಂಚಾಯ್ತಿ ಸಿಇಒ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಶಾಸಕ ಡಿ.ಎಸ್ ಹೂಲಗೇರಿ ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಆಸ್ಪತ್ರೆ ಅವ್ಯವಸ್ಥೆ ಕಂಡು ಶಾಸಕ ಹೂಲಗೇರಿ ವೈದ್ಯರಿಗೆ ಕ್ಲಾಸ್ ತೆಗೆದುಕೊಂಡರು.
ಆಸ್ಪತ್ರೆಯ ಅಶುಚಿತ್ವದ ಬಗ್ಗೆ ಡಿ.ಎಸ್ ಹೂಲಗೇರಿ ಅವರು ಸಿಡಿಮಿಡಿಗೊಂಡರು. ಕೆಲ ದಿನಗಳ ಹಿಂದಷ್ಟೇ ಡಿಎಚ್ಓ ಭೇಟಿ ನೀಡಿ ಸ್ವಚ್ಚತೆಯ ಬಗ್ಗೆ ಆಸ್ಪತ್ರೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದರು. ಆದರೆ ಆಸ್ಪತ್ರೆ ಸಿಬ್ಬಂದಿ ಮೇಲಾಧಿಕಾರಿಗಳ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಕೊಡಲಿಲ್ಲ.
100 ಹಾಸಿಗೆಗಳನ್ನು ಹೊಂದಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಟ ಸೌಲಭ್ಯಗಳಿಲ್ಲ. ಈ ಆಸ್ಪತ್ರೆಯಲ್ಲಿ ಇರುವ 6 ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಾರೆ. ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಲ್ಲದೇ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ತೆರಳಬೇಕು. ಹೀಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಡಿ.ಎಸ್ ಹೂಲಗೇರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ನಿರ್ಲಕ್ಷ್ಯಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.