ಹುಬ್ಬಳ್ಳಿ: ನಮ್ಮಲ್ಲಿ ಸಣ್ಣ ಅಸಮಾಧಾನ ಇರುವುದು ನಿಜ. ಆದರೆ ಪಕ್ಷದಲ್ಲಿಯೇ ಅವುಗಳನ್ನು ಸರಿ ಮಾಡಿಕೊಳ್ಳುತ್ತೇವೆ. ನಾನು ಮತ್ತು ರಮೇಶಣ್ಣ ಪಕ್ಷದಲ್ಲೇ ಇರುತ್ತೇವೆ ಎಂದು ಶಾಸಕ ಮಹೇಶ್ ಕುಮಟಳ್ಳಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಕುಂದಗೋಳ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ನಿರ್ಧಾರ ಮಾಡಲ್ಲ. ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿ ಗೆಲ್ಲಿಸಿಕೊಂಡು ಬರುತ್ತೇವೆ. ರಮೇಶಣ್ಣ ನಾನು ಪಕ್ಷದಲ್ಲೇ ಇದ್ದೇವೆ. ಇದು ಹೈಕಮಾಂಡ್ ಅವರಿಗೂ ತಿಳಿದಿದೆ. ಆದ್ದರಿಂದ ಮಾಧ್ಯಮಗಳಿಗೆ ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದರು.
ನಮ್ಮಲ್ಲಿ ಇರುವ ಅಸಮಾಧಾನವನ್ನು ನಾವೇ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸುಕೊಳ್ಳುತ್ತೇವೆ. ಈ ಬಗ್ಗೆ ಹೈಕಮಾಂಡ್ಗೆ ತಿಳಿಸಿದ್ದೇವೆ. ನಮ್ಮಲ್ಲಿ ಯಾರು ಸಂಧಾನ ಮಾಡುವ ಅವಶ್ಯಕತೆ ಇಲ್ಲ. ಎಲ್ಲರೂ ಒಟ್ಟಾಗಿ ಹೋಗುತ್ತೇವೆ. ಕುಂದಗೋಳದಲ್ಲಿ ನಾವು ಗೆಲ್ಲುತ್ತೇವೆ. ಸಿಎಂ ಕುಮಾರಸ್ವಾಮಿ, ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲರೂ ನಮ್ಮ ನಾಯಕರಾಗಿದ್ದಾರೆ. ಯಾರು ಅಂತಕ ಪಡೆಯುವ ಅಗತ್ಯವಿಲ್ಲ ಎಂದರು.
ಇತ್ತ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ರಮೇಶ್ ಜಾರಕಿಹೊಳಿ ಬಣದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ತಮ್ಮತ್ತ ಸೆಳೆದು ಬಿಜೆಪಿಗೆ ಚಮಕ್ ನೀಡಿದ್ದಾರೆ. ಆ ಮೂಲಕ ಸಮ್ಮಿಶ್ರ ಸರ್ಕಾರ ಚುನಾವಣೆ ಬಳಿಕ ಉಳಿಯುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಖಡಕ್ ಸಂದೇಶ ರವಾನೆ ಮಾಡಿದ್ದಾರೆ.