ಬೆಂಗಳೂರು: ಸಭಾಪತಿ ಆಯ್ಕೆ ವಿಚಾರದಲ್ಲಿ ಎಸ್.ಆರ್.ಪಾಟೀಲರನ್ನು ಗಣನೆಗೆ ತೆಗೆದುಕೊಳ್ಳಬೇಕಿತ್ತೆಂದು ಶಾಸಕ ಎಂ.ಬಿ.ಪಾಟೀಲ್ ಅಸಮಾಧಾನವನ್ನು ಹೊರಹಾಕಿದ್ದಾರೆ.
ಸಭಾಪತಿ ಆಯ್ಕೆ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಎಸ್.ಆರ್. ಪಾಟೀಲರು ಹಿರಿಯರು ಹಾಗೂ ಬಹಳಷ್ಟು ಆಸೆಯನ್ನು ಹೊಂದಿದ್ದರು. ಆದರೆ ಪಕ್ಷದ ಕೆಲ ಮಾನದಂಡಗಳಿಂದ ಅವರಿಗೆ ಅವಕಾಶ ಕೈ ತಪ್ಪಿದೆ. ಅವರಿಗೆ ಅವಕಾಶ ಕೈ ತಪ್ಪಿದ್ದಕ್ಕೆ ನನ್ನನ್ನೂ ಸೇರಿದಂತೆ ಎಲ್ಲರಿಗೂ ನೋವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದೆ ನಮ್ಮ ಪಕ್ಷದ ನಾಯಕರಲ್ಲಿ ವಿನಂತಿ ಮಾಡಿಕೊಂಡಿದ್ದೆವು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ರಾಜ್ಯದ ಎರಡು ಕಣ್ಣುಗಳಿದ್ದಂತೆ. ಈ ಎರಡು ಕಣ್ಣುಗಳನ್ನು ಬೇರೆ ಬೇರೆಯಾಗಿ ಕಾಣಬಾರದು. ರಾಜ್ಯಕ್ಕೆ ಉತ್ತರ ಕರ್ನಾಟಕದ ಕೊಡುಗೆ ಅಪಾರ. ಕಾಂಗ್ರೆಸ್ಸಿನ ಅತಿ ಹೆಚ್ಚು ಶಾಸಕರು ಉತ್ತರ ಕರ್ನಾಟಕದಿಂದಲೇ ಆಯ್ಕೆಯಾಗಿದ್ದಾರೆ. ಆದರೆ ಉತ್ತರಕರ್ನಾಟಕದ 41 ಜನ ಶಾಸಕರಲ್ಲಿ 5 ಜನ ಸಚಿವರಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ 36 ಶಾಸಕರಲ್ಲಿ 9 ಜನರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದರಿಂದಲೇ ಕಾಣುತ್ತದೆ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿರುವುದು ಎಂದು ಬೇಸರ ವ್ಯಕ್ತಪಡಿಸಿದರು.
ಮೊದಲು ಈ ತಾರತಮ್ಯವನ್ನು ಹೋಗಲಾಡಿಸಬೇಕು. ಪಕ್ಷದ ಪ್ರಮುಖ ಹುದ್ದೆಗಳು ಹಾಗೂ ಸರ್ಕಾರದ ಹುದ್ದೆಗಳೂ ಎಲ್ಲವೂ ದಕ್ಷಿಣ ಕರ್ನಾಟಕಕ್ಕೆ ಸಿಕ್ಕಿದೆ. ಹೀಗಾಗಿ ಇದನ್ನು ಸರಿಪಡಿಸಿ, ದಕ್ಷಿಣ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೆ ಮಹತ್ವ ನೀಡಬೇಕು. ಉತ್ತರ ಕರ್ನಾಟಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಅಲ್ಲದೇ ಎಸ್.ಆರ್. ಪಾಟೀಲರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸುತ್ತೇನೆಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv