ಬೆಂಗಳೂರು: ಗ್ರಾಮೀಣ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ವಿಧಾನಸಭಾ ಕ್ಷೇತ್ರವಾರು ತರಬೇತಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ತಿಳಿಸಿದ್ದಾರೆ.
ತುಮಕೂರು ರಸ್ತೆಯ ಮಾದಾವರ ಗ್ರಾಮದ ನೈಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಚಾಂಪಿಯನ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕ್ರಿಕೆಟ್, ವಾಲಿಬಾಲ್, ಕಬಡ್ಡಿ ಸೇರಿದಂತೆ ವಿವಿಧ ಆಟಗಳ ಉತ್ತಮ ಕ್ರೀಡಾಪಟುಗಳಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡುವ ಸಾಮಥ್ರ್ಯವಿದ್ದರೂ ಅಗತ್ಯ ತರಬೇತಿ, ಮಾರ್ಗದರ್ಶನ ಹಾಗೂ ಹಣಕಾಸು ಕೊರತೆಯಿಂದ ಅವಕಾಶ ವಂಚಿತರಾಗಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ತರಬೇತಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದರು.
ಕ್ರೀಡಾ ಪ್ರೋತ್ಸಾಹಕರ ನೆರವಿನಿಂದ ಕ್ರಿಕೆಟ್ ಪಂದ್ಯಾವಳಿಗಳನ್ನು ನಡೆಸುತ್ತಿರುವುದು ಸ್ಥಳೀಯ ಕ್ರೀಡಾಪಟುಗಳು ವಲಯ, ರಣಜಿ, ರಾಜ್ಯ ಮಟ್ಟದಲ್ಲಿ ಆಡಲು ವೇದಿಕೆ ಒದಗಿಸುತ್ತಿರುವುದು ಖುಷಿಯ ಸಂಗತಿಯಾಗಿದ್ದು, ಯಲಹಂಕ ಕ್ಷೇತ್ರದ ಮಟ್ಟಿಗೆ ಇದೇ ವಲ್ರ್ಡ್ ಕಪ್ ಕ್ರಿಕೆಟ್ ಆಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ರವಿಕುಮಾರ್, ಲೋಕೇಶ್ ಹಾಗೂ ಡಿ.ಸಿ ಗೌಡರು ನೇತೃತ್ವದಲ್ಲಿ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿಲಾಗಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ಇ. ಕೃಷ್ಣಪ್ಪ, ದಾಸನಪುರ ಹೋಬಳಿ ಬಿಜೆಪಿ ಅಧ್ಯಕ್ಷ ಹನುಮಯ್ಯ, ಮಾದನಾಯಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಜೆ ಮೂರ್ತಿ, ರಾಮಮೂರ್ತಿ ಮುಂತಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.