ಬೆಂಗಳೂರು: ಕೊರೊನಾಗೆ ಬಲಿಯಾದ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ್ರೆ ಏನು ತಪ್ಪು ಎಂದು ಶಾಸಕ ಜಮೀರ್ ಅಹ್ಮದ್ ಪ್ರಶ್ನಿಸಿದ್ದಾರೆ.
ಕೊರೊನಾದಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆ ಕೋವಿಡ್-19 ನಿಯಮಗಳನುಸಾರವಾಗಿ ನಡೆಯುತ್ತದೆ. ಬಹುತೇಕ ಕುಟುಂಬಸ್ಥರಿಗೂ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಅವಕಾಶ ನೀಡಲ್ಲ. ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಕೋವಿಡ್-19 ನಿಯಮಗಳನ್ನು ಅನುಸರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ. ಈ ರೀತಿಯ ಅಂತ್ಯಕ್ರಿಯೆಯಲ್ಲಿ ಶಾಸಕರು ಭಾಗಿಯಾಗಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.
ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ಸಾವನ್ನಪ್ಪಿದ ಮಹಿಳೆ ನಮ್ಮ ಕ್ಷೇತ್ರದವರು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು. ಆಸ್ಪತ್ರೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಬಿಲ್ ಆಗಿತ್ತು. ಅದನ್ನು ಬಿಬಿಎಂಪಿ ಮೂಲಕ ಪಾವತಿಸಲಾಗಿದೆ. ಅಂತ್ಯಕ್ರಿಯೆ ವೇಳೆ ಮಹಿಳೆಯ ಕುಟುಂಬಸ್ಥರು ಸಹ ಇರಲಿಲ್ಲ. ಎಲ್ಲ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.