ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ (Gruhalakshmi Scheme) 250 ಕೋಟಿ ರೂ.ಗೂ ಅಧಿಕ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಮುಖ್ಯಮಂತ್ರಿ ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ (BJP) ಮುಖಂಡ ಸಿ.ಟಿ. ರವಿ (C.T Ravi) ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ (Chikkamagaluru) ಮಾತನಾಡಿದ ಅವರು, ಈ ಪ್ರಕರಣವನ್ನ ತಕ್ಷಣವೇ ಸಿಬಿಐ ತನಿಖೆಗೆ ವಹಿಸಬೇಕು. ರಾಜ್ಯ ಸರ್ಕಾರದ ಯಾವುದೇ ರೀತಿಯ ತನಿಖೆಯಿಂದಲೂ ಈ ಪ್ರಕರಣದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ. ಏಕೆಂದರೆ, ನಕಲಿ ಖಾತೆಗಳನ್ನು ಪತ್ತೆಹಚ್ಚಿದ್ದು ಸರ್ಕಾರವಲ್ಲ. ಬದಲಿಗೆ ಸಿಐಜಿ ಈ ವಂಚನೆಯನ್ನ ಬಯಲಿಗೆಳೆದಿದೆ. ಒಂದೇ ಬ್ಯಾಂಕ್ ಖಾತೆಗೆ ಸಾವಿರಾರು ಜನರ ಹಣ ವರ್ಗಾವಣೆಯಾಗಿದೆ ಎಂದರೆ ಇದು ಸಾಮಾನ್ಯ ಸಂಗತಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ – ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ
ಈ ಭ್ರಷ್ಟಾಚಾರದ ಕುರಿತು ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಏಕೆ? ಹಿಂದಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಮೌನವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಈ ನಕಲಿ ಖಾತೆಗಳ ಹಣದ ಪಾಲು ಆಳುವವರಿಗೂ ಸಿಕ್ಕಿದೆಯೇ ಎಂಬ ಸಂಶಯ ಮೂಡುತ್ತಿದ್ದು, ಗೃಹಲಕ್ಷ್ಮಿಯರ ಹೆಸರಿನಲ್ಲಿ ಹಣ ಲೂಟಿ ಮಾಡಿರುವುದು ರಾಜ್ಯದ ಗೃಹಲಕ್ಷ್ಮಿಯರಿಗೆ ಮಾಡಿದ ದ್ರೋಹ ಎಂದು ಕಿಡಿಕಾರಿದ್ದಾರೆ.
ಕಾಕಾ ಪಾಟೀಲ್ ಪತ್ನಿ, ಶೋಭಾ ಕರಂದ್ಲಾಜೆ ಹಾಗೂ ಸಿ.ಟಿ.ರವಿ ಪತ್ನಿಗೂ ಯೋಜನೆ ತಲುಪುತ್ತದೆ ಎಂದು ನಂಬಿಸಿದ್ದರು. ಈಗ ಇಂತಹ ಲೂಟಿ ನಡೆಸಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಯೊಂದೇ ದಾರಿ ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ಇ.ಡಿ ದಾಳಿಯಲ್ಲಿ 13.3 ಕೋಟಿ ಮೌಲ್ಯದ ನಗ, ನಾಣ್ಯ ಪತ್ತೆ
