ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಚಂಡಿಕಾ ಹೋಮ ಮಾಡಿ ಪ್ರಧಾನಿ ಮೋದಿಗೆ ಪ್ರಸಾದ ತಲುಪಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಿ ಸನ್ನಿಧಾನದಲ್ಲಿ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ನರಸಿಂಹ ಅಡಿಗರ ನೇತೃತ್ವದಲ್ಲಿ ಚಂಡಿಕಾ ಹೋಮ ನೆರವೇರಿಸಲಾಗಿತ್ತು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರದ ಪರವಾಗಿ ಹೋಮ ಮಾಡಲು ಹೇಳಿಕೊಂಡಿದ್ದರು ಎಂದು ಅರ್ಚಕ ಅಡಿಗರು ಮಾಹಿತಿ ನೀಡಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದ ಹಿರಿಯ ಅರ್ಚಕ ನರಸಿಂಹ ಅಡಿಗ ಚಂಡಿಕಾ ಹೋಮ ಮಾಡಿ, ದೇವಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಸಾದವನ್ನು ದೆಹಲಿಗೆ ತೆಗೆದುಕೊಂಡು ಹೋಗಿದ್ದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಸಾದ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಡಿಗರು ಅವರ ಜೊತೆ ಫೋಟೊವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
ಈ ವಿಶೇಷ ಪೂಜೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿ ಗಮನಕ್ಕೆ ಬಂದಿಲ್ಲ. ಇದು ನರಸಿಂಹ ಅಡಿಗ ಅವರು ಮಾಡಿಸಿದ ವೈಯಕ್ತಿಕ ಪೂಜೆ. ಅವರೇ ಪೂಜೆ ಮಾಡಿಸಿ ಪ್ರಸಾದವನ್ನು ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆ. ಕಾಶ್ಮೀರದ ಬೆಳವಣಿಗೆ ಮತ್ತು ಇಲ್ಲಿ ನಡೆದ ಪೂಜೆಗೂ ಸಂಬಂಧವಿದೆಯೇ ಎಂಬ ಬಗ್ಗೆ ಮಾಹಿತಿಯಿಲ್ಲ ಎಂದು ದೇವಸ್ಥಾನದ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದ್ದಾರೆ.