ಬೆಳಗಾವಿ: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಡಪಾಲ್ ಆರೋಪ ಮಾಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಂದರೆ ಬೆಲೆ ಏರಿಕೆ ಸರ್ಕಾರ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೂಪಾಯಿ ಎರಡೂ ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ರಸ್ತೆಗೆ ಬಂದು ಗ್ಯಾಸ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದರು. ಈಗ ಎಲ್ಲಿದ್ದಾರೆ ಆ ನಾಯಕರು? ಜನಸಾಮಾನ್ಯರಿಗೆ ಆಗುತ್ತಿರುವ ಕಷ್ಟಕ್ಕೆ ಮಾತನಾಡಲು ಯಾರೂ ಬರುತ್ತಿಲ್ಲ ಎಂದು ಹರಿಹಾಯ್ದರು.
ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಅವರ ವೈಫಲ್ಯ ಹಾಗೂ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈಗ ಜಾತಿ ಮೇಲೆ ಬಲ ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಜೊತೆ ಕರ್ನಾಟಕದ ಯುವಕರು ಇದ್ದಾರೆ. ಸರ್ಕಾರದ ಭ್ರಷ್ಟಾಚಾರ ಬೆಲೆ ಏರಿಕೆ ವಿರುದ್ಧ ಹೋರಾಟ ನಿರಂತರವಾಗಿರುವುದು ಎಂದರು.
ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ಕಾಟ, ಬಿಜೆಪಿ ಸರ್ಕಾರದ ನಡೆಯಿಂದ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ ಅವರು, ಹಿಂದೂತ್ವ ಕೇವಲ ಬಿಜೆಪಿಯವರ ಆಸ್ತಿನಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವ ಕೇವಲ ಬಿಜೆಪಿಗೆ ಬರೆದುಕೊಟ್ಟಿದ್ದಾರೆ. ಮಠದ ಸ್ವಾಮೀಜಿಗೆ ನೀಡಿರುವ ಅನುದಾನ ನೀಡಲು 30% ಕಮಿಷನ್ ಕೇಳುತ್ತಾರೆ. ಇಂಥಾ ಸರ್ಕಾರ ಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮೇ 3ಕ್ಕೆ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ – ಕಾರ್ಯಕ್ರಮಗಳ ವಿವರ ಹೀಗಿದೆ
ಜಿಲ್ಲಾ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಡಬಲ್ ಎಂಜಿನ್ ಸರ್ಕಾರದಿಂದ ಸಾಮಾನ್ಯ ಜನರಿಗೆ ಬೆಲೆ ಏರಿಕೆಯಿಂದ ಸಾಕಷ್ಟು ತೊಂದರೆ ಮಾಡುತ್ತಿದೆ. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಯುವಕರಿಗೆ ವಂಚನೆ ಮಾಡಿದೆ. ರಾಜ್ಯದಲ್ಲಿ 40% ಕಮಿಷನ್ ಸರ್ಕಾರಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿಯಾಗಿದ್ದಾರೆ. ಇದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್