ಹಾಸನ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗಮನ ಸೆಳೆದಿರುವ ಜಿಲ್ಲೆಯ ಹೊಳೆನರಸಿಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಆರ್.ಟಿ.ಓ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ನ ಯುವ ನಾಯಕ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.
ಕ್ಷೇತ್ರದಲ್ಲಿ ಆರ್ ಟಿಓ ಕಚೇರಿಯ ಸಿಬ್ಬಂದಿ ಸೀಜ್ ಮಾಡುವ ನೆಪದಲ್ಲಿ ಪಡೆದ ಹಣವನ್ನು ವಾಹನಗಳಿಗೆ ಪೊಲೀಸ್ ಸ್ಟಿಕ್ಕರ್ ಬಳಸಿಕೊಂಡು ಸಾಗಾಣೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಈ ಕುರಿತು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಧಿಕಾರಿಗಳನ್ನು ಒತ್ತಾಯ ಮಾಡಿದ್ದಾರೆ.
ಕ್ಷೇತ್ರದ ವ್ಯಾಪ್ತಿಯ ಗಾರ್ಮೆಂಟ್ಸ್ ಕಾರ್ಯನಿರ್ವಹಿಸುವ ಮಹಿಳೆಯರಿಗೂ ಹಣದ ಆಮಿಷ ಒಡ್ಡಲಾಗುತ್ತಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳಾ ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳ ಚಾಲಕರಿಗೆ ಬೆದರಿಕೆ ಒಡ್ಡಿರುವ ಕಾಂಗ್ರೆಸ್ ಪಕ್ಷದವರು ಹಣ ಮತ್ತು ಉಡುಗೊರೆಗಳನ್ನು ಹಂಚುತ್ತಿದ್ದಾರೆ ಎಂದು ಪ್ರಜ್ವಲ್ ಆರೋಪಿಸಿದ್ದಾರೆ.