ತುಮಕೂರು: ದೇವಾಲಯದ ಹರಿಸೇವೆ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ನೀಡಿದ್ದ ದೇವರ ಪ್ರಸಾದ ಸೇವಿಸಿ 14ಕ್ಕೂ ಹೆಚ್ಚು ಭಕ್ತರು ಆಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ಹರಿಸೇವೆ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ನಂತರ ಭಕ್ತರಿಗೆ ಅನ್ನ-ಸಾರು, ಪಲ್ಯ ವಿತರಣೆ ಮಾಡಲಾಗಿತ್ತು. ಪ್ರಸಾದ ಸೇವಿಸಿ ಮನೆಗೆ ತೆರಳಿದ ಭಕ್ತರು ಬೆಳಗಿನ ವೇಳೆಗೆ ಆಸ್ವಸ್ಥರಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಭಕ್ತರು ಆಸ್ವಸ್ಥಗೊಂಡಿರುವುದಿಂದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ತಿಂಗಳ ಹಿಂದೆ ಚಾಮರಾಜನಗರದ ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ 17 ಮಂದಿ ಸಾವನ್ನಪ್ಪಿದ್ದರು. ಆ ಬಳಿಕ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದಲ್ಲೂ ಇಂತಹದ್ದೇ ಘಟನೆ ವರದಿಯಾಗಿತ್ತು. ಸದ್ಯ ಇಂತಹದ್ದೇ ಮತ್ತೊಂದು ಘಟನೆ ನಡೆದಿದೆ.