ಚಿಕ್ಕಮಗಳೂರು: ಸರ್ಕಾರಿ ಬಸ್ಸೊಂದು ಸುಮಾರು 30 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಡೂರು ತಾಲೂಕು ತಂಗಲಿ ಸಮೀಪದ ವೇದಾ ನದಿ ಸೇತುವೆಯಿಂದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಸುಮಾರು 20 ಅಧಿಕ ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿತ್ತು. ಬಸ್ ತಂಗಲಿ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ವೇದಾ ನದಿ ಸೇತುವೆಗೆ ಡಿಕ್ಕಿ ಹೊಡೆದು ನದಿಗೆ ಬಿದ್ದಿದೆ.
ಬಸ್ ನದಿಗೆ ಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಈ ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಕಡೂರು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇದಾ ನದಿ ಸುಮಾರು ವರ್ಷಗಳಿಂದ ನೀರಿಲ್ಲದೇ ಬತ್ತಿಹೋಗಿತ್ತು. ಈ ಘಟನೆ ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.