ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶೋಭಾ ಅವರು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿರುವ ಮದ್ದೂರಮ್ಮ ಸನ್ನಿಧಿಗೆ ಆಗಮಿಸಿದ್ದಾರೆ. ಅಲ್ಲದೆ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಪಟ್ಟ ಅಲಂಕರಿಸಲಿ ಎಂದು ಮದ್ದೂರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ವಿಶ್ವಾತ ಮತ ಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿ ಎಂದು ಶೋಭಾ ಪ್ರಾರ್ಥನೆ ಸಲ್ಲಿಸಿದ್ದಾರೆ.
ಶೋಭಾ ಅವರು ಮದ್ದೂರಮ್ಮ ದೇವಸ್ಥಾನಕ್ಕೆ ಬರುವ ಮೊದಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿ ಚಾಮುಂಡೇಶ್ವರಿ ದೇವಿಯಲ್ಲಿ ಬೇಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಲ್ಲಿಯವರೆಗೆ ಈ ರೀತಿ ತಾಯಿಗೆ ಯಾವ ಬೇಡಿಕೆಯನ್ನೂ ಇಟ್ಟಿರಲಿಲ್ಲ. ರಾಜ್ಯದಲ್ಲಿ ಜನವಿರೋಧಿ, ಶಾಸಕರ ವಿರೋಧಿ ಸರ್ಕಾರ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಇತ್ತ ಯಡಿಯೂರಪ್ಪ ಅವರು ನಯಾ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಎಸ್ವೈ ಕೊರಳಲ್ಲಿ ಹಾಗೂ ಕೈಯಲ್ಲಿ ರುದ್ರಾಕ್ಷಿ ಧರಿಸಿದ್ದಾರೆ. ಅಲ್ಲದೆ ದೇವಸ್ಥಾನದಲ್ಲಿ ಕೊಡುವ ದಾರಗಳನ್ನು ಕೈಗೆ ಕಟ್ಟಿಕೊಂಡಿದ್ದಾರೆ. ಜೊತೆಗೆ ನೆತ್ತಿಯ ಮೇಲೆ ಕಪ್ಪು ಬೊಟ್ಟು ಹಾಕಿ ಸದನಕ್ಕೆ ಆಗಮಿಸಿದ್ದಾರೆ.