ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡರೊಬ್ಬರು ಜೆಡಿಎಸ್ ಕಾರ್ಯಕರ್ತರಿಗೂ ಬಾಡೂಟ ಹಾಕಿಸುವ ಮೂಲಕ ಹುಬ್ಬೇರಿಸುವಂತೆ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡಾರದ ಜಿ.ಎಚ್.ನಾಗರಾಜ್ ಹಾಗೂ ಅವರ ಮಗ ವಿನಯ್ ಶ್ಯಾಂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದರು.
ನಂದಿ ಬೆಟ್ಟದ ತಪ್ಪಲಿನ ತಮ್ಮ ತೋಟದ ಮನೆಯಲ್ಲಿ ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಸೇರಿದಂತೆ ಸುಮಾರು 3 ರಿಂದ 4 ಸಾವಿರ ಮಂದಿ ಕಾರ್ಯಕರ್ತರು ಭರ್ಜರಿ ಬಾಡೂಟ ಸವಿದಿದ್ದಾರೆ.
ಇತ್ತೀಚೆಗೆ ನಡೆದ ಚಿಕ್ಕಬಳ್ಳಾಪುರ ನಗರಸಭಾ ಚುನಾವಣೆಯನ್ನು ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗಟ್ಟಾಗಿ ಎದುರಿಸಿದ್ದವು. ಇದರಲ್ಲಿ ಕಾಂಗ್ರೆಸ್ 16, ಬಿಜೆಪಿ 9, ಜೆಡಿಎಸ್ 2 ಹಾಗೂ 4 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದರು. ಅಲ್ಲದೆ ಭಾನುವಾರ ನಡೆದ ಪಿಎಲ್ಡಿ ಚುನಾವಣೆಯಲ್ಲೂ ಜೆಡಿಎಸ್-ಕಾಂಗ್ರೆಸ್ ಒಂದಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಸೆಣಸಾಡಿದ್ದರು. ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿದ ಹಿನ್ನೆಲೆ, ಕಾಂಗ್ರೆಸ್ ಮುಖಂಡ ಜಿ.ಎಚ್.ನಾಗರಾಜ್ ಭರ್ಜರಿ ಬಾಡೂಡ ಆಯೋಜಿಸಿದ್ದು, ಬಾಡೂಟದಲ್ಲಿ ಜೆಡಿಎಸ್ ಮಾಜಿ ಶಾಸಕ ಬಚ್ಚೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.