ಪೌರತ್ವ ಕಾಯ್ದೆ ವಿರೋಧಿಸಿ ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

Public TV
2 Min Read
hbl caa protest

ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳವಾರ ಹುಬ್ಬಳ್ಳಿಯ ಬೃಹತ್ ಪ್ರತಿಭಟನೆ ಮಾಡಲು ಅಂಜುಮನ್ ಇಸ್ಲಾಂ ಸಂಸ್ಥೆ ಮುಂದಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಸಭೆ ನಡೆಸಿ ಚರ್ಚೆ ಮಾಡಿದ ಮುಸ್ಲಿಂ ಸಮಾಜದ ಮುಖಂಡರು ಸಿಎಎ ವಿರೋಧಿಸಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಮುಸ್ಲಿಂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಇನ್ನೂ ಪೊಲೀಸ್ ಇಲಾಖೆಯ ಅನುಮತಿ ದೊರೆತಿಲ್ಲ.

ಮುಸ್ಲಿಂ ಸಂಘಟನೆಯ ಮುಖಂಡರ ಜೊತೆ ಹುಬ್ಬಳ್ಳಿಯಲ್ಲಿ ಎಂಎಲ್‍ಸಿ ಸಿಎಂ ಇಬ್ರಾಹಿಂ ಹಾಗೂ ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಸಭೆ ನಡೆಸಿದರು. ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಪ್ರಕಟಿಸಿದ್ದಾರೆ. ಡಿಸೆಂಬರ್ 24ರಂದು ಅಂಬೇಡ್ಕರ್ ಸರ್ಕಲ್‍ನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸುವುದಾಗಿ ಅಂಜುಮನ್ ಇಸ್ಲಾಂ ಸಂಸ್ಥೆ ಅಧ್ಯಕ್ಷ ಯೂಸೂಫ್ ಸವಣೂರು ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

hbl caa protest 2

ಪ್ರತಿಭಟನೆಯಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆ, ವಿವಿಧ ಸಂಘಟನೆಗಳು, ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು ಭಾಗಿಯಾಗಲಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.

ಪ್ರತಿಭಟನೆಗೆ ಇನ್ನೂ ಸಿಕ್ಕಿಲ್ಲ ಗ್ರೀನ್ ಸಿಗ್ನಲ್:
ಹುಬ್ಬಳ್ಳಿಯಲ್ಲಿ ಅಂಜುಮನ್ ಇಸ್ಲಾಂ ಸಂಸ್ಥೆ ಹಾಗೂ ವಿವಿಧ ಸಂಘಟನೆಗಳು ನಡೆಸಲು ಮುಂದಾಗಿರುವ ಪ್ರತಿಭಟನೆಗೆ ಪೊಲೀಸ್ ಇಲಾಖೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಕೆಲ ಮುಖಂಡರು ಹಳೇ ಹುಬ್ಬಳ್ಳಿಯ ಅಂಬೇಡ್ಕರ್ ಸರ್ಕಲ್‍ನಿಂದ ತಹಶೀಲ್ದಾರ್ ಕಚೇರಿವರೆಗೆ ಬೃಹತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಹಳೇ ಹುಬ್ಬಳ್ಳಿಯಿಂದ ಪ್ರತಿಭಟನೆ ಆರಂಭವಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಹುದು ಎನ್ನುವ ಹಿನ್ನೆಲೆಯಲ್ಲಿ ಪೊಲೀಸ್ ಆಯಕ್ತರು ಪ್ರತಿಭಟನೆಗೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಹಳೆ ಹುಬ್ಬಳ್ಳಿಯಿಂದ ಪ್ರತಿಭಟನೆಗೆ ಅವಕಾಶ ನೀಡಬೇಕೋ? ಬೇಡವೋ ಅನ್ನೋ ಬಗ್ಗೆ ಪೊಲೀಸ್ ಇಲಾಖೆ ನಿರ್ಧಾರ ಕೈಗೊಳ್ಳಲಿದೆ.

hbl caa protest 1

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ರೈಲ್ವೆ ನಿಲ್ದಾಣದ ಬಳಿಯ ಅಂಬೇಡ್ಕರ್ ಸರ್ಕಲ್‍ನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ಮಾಡಿ. ಹಳೇ ಹುಬ್ಬಳ್ಳಿಯಿಂದ ಪ್ರತಿಭಟನೆ ಬೇಡವೆಂದು ಪೊಲೀಸರು ಮುಸ್ಲಿಂ ಸಮಾಜದ ಮುಖಂಡರಿಗೆ ಮನವಿ ಮಾಡಿದ್ದಾರೆ. ಆದರೆ ಕೆಲ ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಸಮಾಜದ ಮುಖಂಡರು ಹಳೇ ಹುಬ್ಬಳ್ಳಿಯಿಂದಲೇ ಪ್ರತಿಭಟನೆ ನಡೆಸಲು ಮುಂದಾಗಿರುವುದು ಪೊಲೀಸರನ್ನ ಪೇಚಿಗೆ ಸಿಲುಕಿಸಿದಂತಾಗಿದೆ.

ಯಾವ ಸ್ಥಳದಿಂದ ಪ್ರತಿಭಟನೆ ನಡೆಸಬೇಕು. ಎಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಲಿದ್ದಾರೆ ಎನ್ನುವ ಬಗ್ಗೆ ಇಂದು ನಡೆಯಲಿರುವ ಇನ್ನೊಂದು ಸುತ್ತಿನ ಸಭೆಯಲ್ಲಿ ಅಂತಿಮ ನಿರ್ಧಾರ ತಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *