ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅನೆಗಳಿಗೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ.
ಇಂದು ಈ ಗಜ ಪಡೆಯ ಸ್ವಾಗತಕ್ಕೆ ಡೊಳ್ಳು, ಕಂಸಾಳೆ ವಿವಿಧ ಜನಪದ ಕಲಾ ತಂಡಗಳ ಮೆರುಗು ತುಂಬಿದವು. ಇದರ ಜೊತೆಗೆ ಕಲಶ ಹೊತ್ತು ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅರ್ಜುನ, ವಿಜಯ, ಅಭಿಮನ್ಯು, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ ಆನೆಗಳು ಮೈಸೂರಿಗೆ ಪ್ರಯಣ ಮಾಡಿದವು.
ಮೊದಲ ತಂಡವಾಗಿ ಐದು ಅನೆಗಳು ಮೈಸೂರಿಗೆ ಪ್ರಯಾಣ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಕೂಡ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಬರಬೇಕಾದ ನೂತನ ಸಚಿವರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಬರುವುದನ್ನು ಒಂದು ನಿಮಿಷವೂ ಕಾಯದೇ ಪುಷ್ಪಾರ್ಚನೆ ಮಾಡಿದ ಶಾಸಕ ಎಸ್.ಎ ರಾಮದಾಸ್, ಯಾರನ್ನು ಕಾಯುವ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳಿಗೆ ಹೇಳಿ ಪುಷ್ಪಾರ್ಚನೆ ಮಾಡಿದರು.
ಎಲ್ಲ ಕಾರ್ಯಕ್ರಮಗಳು ಮುಗಿದ ಮೇಲೆ ತಡವಾಗಿ ಬಂದ ಸಚಿವಾರದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಅವರು ಮತ್ತೊಮ್ಮೆ ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.
ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿತ್ತು. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿತ್ತು. ಆದರೆ ಶಾಸಕ ರಾಮದಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.