ಮೈಸೂರು: ಕಪಿಲಾ ನದಿ ಪ್ರವಾಹ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ನದಿ ಉಕ್ಕಿ ಹರಿಯುತ್ತಿದ್ದು, ಪರಿಣಾಮ ಮೈಸೂರು- ಊಟಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕಡಿತಗೊಂಡಿದೆ.
72 ಸಾವಿರ ಕ್ಯೂಸೆಕ್ ನೀರು ಕಬಿನಿ ಜಲಾಶಯದಿಂದ ಹೊರಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸಂಪೂರ್ಣ ಸಂಚಾರ ಬಂದ್ ಆಗಿದ್ದು, ಪೊಲೀಸರು ಬದಲಿ ರಸ್ತೆ ಮೂಲಕ ವಾಹನ ಸವಾರರ ಮಾರ್ಗ ಬದಲಿಸುತ್ತಿದ್ದಾರೆ. ಇದನ್ನೂ ಓದಿ: ಕಬಿನಿ ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನೀರು ಹೊರಕ್ಕೆ
ಹಲವು ವರ್ಷಗಳ ನಂತರ ಕಪಿಲಾ ನದಿ ರಾಷ್ಟ್ರೀಯ ಹೆದ್ದಾರಿ ಮೇಲೆ ಉಕ್ಕಿ ಹರಿಯುತ್ತಿದೆ. ಹೆದ್ದಾರಿ ಸಂಪರ್ಕ ಕಡಿತದಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಇದರಿಂದ ನಂಜನಗೂಡಿಗೆ ತೆರಳುವ ಭಕ್ತರಿಗೂ ಸಂಕಷ್ಟ ಎದುರಾಗಿದೆ. ನಂಜನಗೂಡು ದೇವಾಲಯದ ಸಮೀಪದ ಸ್ನಾನಘಟ್ಟ ಹಾಗೂ 16 ಕಾಲು ಮಂಟಪ ಸಹ ಸಂಪೂರ್ಣ ಮುಳುಗಡೆಯಾಗಿದೆ. ಜೊತೆಗೆ ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದೆ.
ಮೈಸೂರಿನ ಕಬಿನಿ ಜಲಾಶಯದಿಂದ 74 ಸಾವಿರ ಕ್ಯೂಸೆಕ್ ನೀರು ಹೊರ ಬಿಟ್ಟಿರುವ ಕಾರಣ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸುತ್ತೂರು ಸೇತುವೆ ಸಂಪೂರ್ಣ ಮುಳುಗಡೆ ಆಗಿದೆ. ಅಲ್ಲದೆ ಸೇತುವೆ ಮೇಲೆ ನದಿ ನೀರು ತುಂಬಿ ಹರಿಯುತ್ತಿದೆ. ಇದರಿಂದ ಸೇತುವೆ ಸುತ್ತಮುತ್ತಲಿನ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಕಬಿನಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಎಚ್.ಡಿ.ಕೋಟೆ ತಾಲೂಕಿನ ಡಿ.ಬಿ.ಕುಪ್ಪೆ, ವಡಕನಮಾಳ ಗ್ರಾಮಕ್ಕೆ ನೀರು ನುಗಿದ್ದು, ಹಿನ್ನೀರಿನ ಪ್ರದೇಶ ನೀರಿನಿಂದ ಮುಳುಗಡೆಯಾಗಿದೆ. ಕಬಿನಿ ಜಲಾಶಯಕ್ಕೆ ಕ್ಷಣ ಕ್ಷಣಕ್ಕು ಒಳಹರಿವು ಹೆಚ್ಚಾಗುತ್ತಿದೆ. ಸದ್ಯಕ್ಕೆ ಕಬಿನಿ ಜಲಾಶಯದಿಂದ ಬರೋಬ್ಬರಿ 80 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಇದೇ ಮೊದಲ ಬಾರಿಗೆ 80 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ. ಯಾವುದೇ ಕ್ಷಣದಲ್ಲಿ ಮತ್ತಷ್ಟು ಜಲಾಶಯಕ್ಕೆ ಒಳಹರಿವು ಸಾಧ್ಯತೆ ಇದೆ. ಆದ್ದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. ಆದರೆ ಇದೇ ಮೊದಲ ಬಾರಿಗೆ ಕಪಿಲಾ ನದಿ ದಾಖಲೆ ರೂಪದಲ್ಲಿ ಉಕ್ಕಿ ಹರಿಯುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews
https://www.youtube.com/watch?v=xeVIcu1_BXQ