ಮೈಸೂರು: ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು. ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಹೆಚ್ಚು ಅವಕಾಶ ನೀಡುವಂತೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಡಿ. ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಎಂದರು.
ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೈಸೂರು ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪರಿಸರ ಸ್ನೇಹಿ ಎಲ್ ಇಡಿ ಬಳಕೆ ಮಾಡಲಾಗುತ್ತದೆ. 100 ಕಿ.ಮೀ.ನಷ್ಟು ದೀಪಾಲಂಕಾರ ಮಾಡಲಾಗುವುದು. 41 ಸರ್ಕಲ್ ಗಳಲ್ಲಿ ಅಂಬಾರಿ, ವಿಧಾನಸೌಧ, ಕೆಆರ್ ಎಸ್ ಪ್ರತಿಕೃತಿಗಳ ದೀಪಾಲಂಕಾರ ಮಾಡಲಾಗುತ್ತದೆ. ಇನ್ನೆರಡು ದಿನದಲ್ಲಿ ದೀಪಾಲಂಕಾರ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಹೇಳಿದರು. ಇದನ್ನೂ ಓದಿ: ಇನ್ಸ್ಪೆಕ್ಟರ್ ಮೃತಪಟ್ಟಾಗ ಸೋನಿಯಾ ಅತ್ತಿರಲಿಲ್ಲ, ಟೆರರಿಸ್ಟ್ ಸತ್ತಾಗ ಅತ್ತಿದ್ದರು: ಪ್ರಹ್ಲಾದ್ ಜೋಶಿ
ಅ.6ರಂದು ಸಂಜೆ 6 ಗಂಟೆಗೆ ದೀಪಾಲಂಕಾರಗಳ ಉದ್ಘಾಟನೆಯಾಗಲಿ. ಅಂದು ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿದ್ದು ದೀಪಾಲಂಕಾರಗಳನ್ನು ವೀಕ್ಷಿಸಲಿದ್ದಾರೆ. ರಾತ್ರಿ 10 ಗಂಟೆಯವರೆಗೆ ದೀಪಾಲಂಕಾರ ಇರಲಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು. ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ನಟ ನಿನಾಸಂ ಸತೀಶ್ಗೆ ಮಾತೃ ವಿಯೋಗ