ಮಂಡ್ಯ: 2021ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ನೀಡಲಿದ್ದು, ನಾಳೆಯಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಕರಿ ನೆರಳ ನಡುವೆ ನವರಾತ್ರಿ ಸಂಭ್ರಮ ಕಳೆಗಟ್ಟಲಿದೆ.
ಕಳೆದ ಎರಡು ವರ್ಷಗಳಿಂದ ಇಡೀ ವಿಶ್ವವನ್ನೇ ಕೊರೊನಾ ಎಂಬ ಮಹಾ ಮಾರಿ ಕಾಡುತ್ತಿದೆ. ಇದರಿಂದ ಹಲವರು ಐತಿಹಾಸಿಕ ಕಾರ್ಯಕ್ರಮಗಳು ಕಳೆಗುಂದಿವೆ. ಅದೇ ರೀತಿ ಮೈಸೂರಿನ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ವೈಭವ ಕಳೆದ ವರ್ಷದಿಂದ ಕಳೆಗುಂದಿದೆ. ಕೊರೊನಾ ನಡುವೆಯೂ ಸಹ ಐತಿಹಾಸಿಕ ಆಚರಣೆ ನಿಲ್ಲಬಾರದು ಎಂಬ ಉದ್ದೇಶದಿಂದ ಈ ಬಾರಿಯ ದಸರಾವನ್ನು ಸರಳವಾಗಿ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ನಾಳೆ ಈ ಸರಳ ದಸರಾ ಮಹೋತ್ಸವಕ್ಕೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ನಾಳೆ ಬೆಳಗ್ಗೆ 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ಎಸ್.ಎಂ.ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿ ರಥದಲ್ಲಿನ ಚಾಮುಂಡೇಶ್ವರಿ ತಾಯಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ 2021 ರ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಭಾಗವಹಿಸಲಿದ್ದು, ಕೊರೊನಾ ಕಾರಣ ಈ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವರ್ಚುವಲ್ ಮುಖಾಂತರ ಜನ ಸಾಮಾನ್ಯರು ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆ- ಎಸ್.ಎಂ.ಕೃಷ್ಣಾರನ್ನು ಅಧಿಕೃತವಾಗಿ ಆಹ್ವಾನಿಸಿದ ಸರ್ಕಾರ
ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ದೊರೆತ ಬಳಿಕ ಸಂಜೆ 6 ಗಂಟೆಗೆ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದು, ಜೊತೆಗೆ ಸುಗಮ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಿದ್ದಾರೆ. ನಾಳೆಯಿಂದ ಏಳು ದಿನಗಳ ಕಾಲ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಕ್ಟೋಬರ್ 15 ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.