ಮೈಸೂರು: ಮುಂದಿನ ತಿಂಗಳು ನಡೆಯುವ ಉಪಚುನಾವಣೆಯ ಫಲಿತಾಂಶ ಬಂದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಮುಖಂಡ ನಾರಾಯಣಗೌಡ (48) ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಅಂತಿಮ ದರ್ಶನಕ್ಕೆ ಹೆಚ್ಡಿಕೆ ಆಗಮಿಸಿದ್ದರು. ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನೆರಡು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುತ್ತೇವೆ ಎಂದು ತಿಳಿಸಿದರು.
ಈ ಚುನಾವಣೆ ಎಲ್ಲಾ ಪಕ್ಷಗಳಿಗೂ ಅಗ್ನಿ ಪರೀಕ್ಷೆ. ಚುನಾವಣೆ ನಡೆದೇ ನಡೆಯುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ. ಗೆಲುವು ಸಾಧಿಸಲು ಜೆಡಿಎಸ್ ತನ್ನದೇ ಆದ ರಾಜಕೀಯ ತಂತ್ರಗಾರಿಕೆ ಮಾಡಿದೆ. ಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದ ರಾಜಕೀಯದಲ್ಲಿ ಹೊಸ ನಾಟಕಗಳು ಶುರುವಾಗಲಿದೆ ಎಂದು ಹೇಳಿದರು.
ಅಕ್ಟೋಬರ್ 21ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತದೆ. ಅಕ್ಟೋಬರ್ 24ರಂದು ಚುನಾವಣಾ ಫಲಿತಾಂಸ ಹೊರಬೀಳಲಿದೆ.